ಚಾಮರಾಜನಗರ: ಜಿಲ್ಲೆಯ ಪ್ರಸಿದ್ಧ ಯಾತ್ರಾ ಸ್ಥಳ ಮಹದೇಶ್ವರ ಬೆಟ್ಟದ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಶ್ರಾವಣ ಮಾಸದ ಎಣ್ಣೆ ಮಜ್ಜನ, ಅಮಾವಾಸ್ಯೆ ವಿಶೇಷ ಪೂಜೆ, 108 ಕುಂಭಾಭಿಷೇಕ, ಸಹಸ್ರ ಅಭಿಷೇಕ ಪೂಜೆಗಳು ಆಗಸ್ಟ್ 17ರಿಂದ 19ರವರೆಗೆ ನಡೆಯಲಿವೆ.
ಆದರೆ, ಕೋವಿಡ್–19 ಕಾರಣದಿಂದ ಮುನ್ನೆಚ್ಚರಿಕೆ ಕ್ರಮವಾಗಿ ಮೂರು ದಿನಗಳ ಕಾಲ ದೇವಾಲಯಕ್ಕೆ ಸಾರ್ವಜನಿಕರು ಹಾಗೂ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಆದೇಶ ಹೊರಡಿಸಿದ್ದಾರೆ.
ಸಾಮಾನ್ಯವಾಗಿ ಎಣ್ಣೆ ಮಜ್ಜನ ಸೇವೆ, ಅಮಾವಾಸ್ಯೆ ವಿಶೇಷ ಪೂಜೆಗಳ ಸಂದರ್ಭದಲ್ಲಿ ದೇವಾಲಯಕ್ಕೆ ಭಾರಿ ಸಂಖ್ಯೆಯ ಭಕ್ತರು ಭೇಟಿ ನೀಡಿರುವುದರಿಂದ ಕೋವಿಡ್–19 ತಡೆಗಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸಾಧ್ಯವಾಗುವುದಿಲ್ಲ.
ಹೀಗಾಗಿ, ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಅವರ ಪತ್ರದ ಅನುಸಾರ ಸರ್ಕಾರಿ ಕೆಲಸದ ನಿಮಿತ್ತ ತೆರಳುವ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳನ್ನು ಬಿಟ್ಟು, ಉಳಿದ ಎಲ್ಲ ಸಾರ್ವಜನಿಕರು ಹಾಗೂ ಭಕ್ತರ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಆದೇಶದಲ್ಲಿ ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.