ಚಾಮರಾಜನಗರ: ದಿಗ್ಬಂಧನದ ನಿಯಮಗಳನ್ನು ಉಲ್ಲಂಘಿಸಿ ವಾಹನಗಳಲ್ಲಿ ಅನಗತ್ಯವಾಗಿ ರಸ್ತೆಗಳಲ್ಲಿ ತಿರುಗಾಡುವವರಿಗೆ ಜಿಲ್ಲೆಯಲ್ಲಿ ಇನ್ನು ಮುಂದೆ ಪೆಟ್ರೋಲ್, ಡೀಸೆಲ್ ಸಿಗುವುದಿಲ್ಲ.
ತುರ್ತು, ಅಗತ್ಯ ಸೇವೆ ಒದಗಿಸುವ ಹಾಗೂ ಸರಕು ಸಾಗಣೆ ವಾಹನಗಳಿಗೆ ಮಾತ್ರ ಇಂಧನ ಮಾರಾಟ ಮಾಡಬೇಕು ಎಂದು ಪೊಲೀಸರು ಜಿಲ್ಲೆಯಲ್ಲಿರುವ ಎಲ್ಲ ಪೆಟ್ರೋಲ್ ಬಂಕ್ ಮಾಲೀಕರಿಗೆ ಸೂಚನೆ ನೀಡಿದ್ದಾರೆ. ಒಂದು ವೇಳೆ ಇದನ್ನು ಉಲ್ಲಂಘಿಸಿದರೆ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ನೀಡಲಾಗಿದೆ.
ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ಉದ್ದೇಶದಿಂದ ದಿಗ್ಬಂಧನ ಹೇರಲಾಗಿದ್ದರೂ, ಕೆಲವರು ಇದನ್ನು ಗಂಭೀರವಾಗಿ ಪರಿಗಣಿಸದೆ ಅನಗತ್ಯವಾಗಿ ಓಡಾಡುತ್ತಿದ್ದಾರೆ. ಇದನ್ನು ತಪ್ಪಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಹೊಸ ನಿಯಮ ಸೋಮವಾರದಿಂದಲೇ ಜಾರಿಗೆ ಬಂದಿದೆ. ಪೆಟ್ರೋಲ್ ಬಂಕ್ಗಳು ತೆರೆದಿದ್ದರೂ ಸಿಬ್ಬಂದಿ ಅಗತ್ಯ ಸೇವೆ, ಪಾಸ್ ಹೊಂದಿರುವ ವಾಹನಗಳಿಗೆ ಮಾತ್ರ ಪೆಟ್ರೋಲ್, ಡೀಸೆಲ್ ಹಾಕುತ್ತಿದ್ದಾರೆ.