ಚಾಮರಾಜನಗರ: ಅಪಘಾತದಲ್ಲಿ ಮೃತಪಟ್ಟಿದ್ದ ಕೇರಳದ ವ್ಯಕ್ತಿಯ ಮರಣೋತ್ತರ ಪರೀಕ್ಷೆ ಮಾಡಲು ₹25 ಸಾವಿರಕ್ಕೆ ಬೇಡಿಕೆ ಇಟ್ಟ ಆರೋಪಕ್ಕೆ ಸಂಬಂಧಿಸಿದಂತೆ ಜಿಲ್ಲಾಸ್ಪತ್ರೆಯ ಮುಖ್ಯ ಸರ್ಜನ್ ಡಾ.ಶ್ರೀನಿವಾಸ ಅವರು ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರೊಬ್ಬರಗೆ ನೋಟಿಸ್ ನೀಡಿದ್ದಾರೆ.
ಈ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಡಾ.ಶ್ರೀನಿವಾಸ ಅವರು, ‘ನಮಗೆ ಯಾರೂ ಲಿಖಿತವಾಗಿ ದೂರು ನೀಡಿಲ್ಲ. ಆದರೆ, ಮಾಧ್ಯಮಗಳಲ್ಲಿ ಬಂದ ವರದಿಗಳ ಆಧಾರದಲ್ಲಿ ಶುಕ್ರವಾರ ಶವಾಗಾರದಲ್ಲಿ ಕರ್ತವ್ಯದಲ್ಲಿದ್ದ ಸಂಪತ್ ಎಂಬ ನೌಕರನಿಗೆ ವಿವರಣೆ ಕೋರಿ ನೋಟಿಸ್ ನೀಡಲಾಗಿದೆ’ ಎಂದರು.
‘ಇಂತಹ ಆರೋಪಗಳನ್ನು ಸಹಿಸಲು ಸಾಧ್ಯವಿಲ್ಲ. ನೌಕರ ನೀಡುವ ವಿವರಣೆಯನ್ನು ಪರಿಶೀಲಿಸಿ, ವೈದ್ಯಕೀಯ ವಿಜ್ಞಾನ ಸಂಸ್ಥೆಗಳ ಡೀನ್ ಹಾಗೂ ಇತರರೊಂದಿಗೆ ಚರ್ಚಿಸಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದರು.