ಚಾಮರಾಜನಗರ: ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಹಾಗೂ ಜಾರಿ ನಿರ್ದೇಶನಾಲಯಗಳು (ಇ.ಡಿ) ಸಂಘಟನೆಯ ರಾಷ್ಟ್ರೀಯ ಮತ್ತು ರಾಜ್ಯ ನಾಯಕರ ಮನೆ, ಕಚೇರಿ ಮೇಲೆ ದಾಳಿ ನಡೆಸಿ ಕಿರುಕುಳ ನೀಡುತ್ತಿವೆ ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ನಗರದಲ್ಲಿ ಗುರುವಾರ ಸಂಜೆ ಪ್ರತಿಭಟನೆ ನಡೆಸಿದರು.
ನಗರದ ಸುಲ್ತಾನ್ ಷರೀಫ್ ವೃತ್ತದಲ್ಲಿ ಸಮಾವೇಶಗೊಂಡ ಪ್ರತಿಭಟನಕಾರರು ಎರಡೂ ಸಂಸ್ಥೆಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪಿಎಫ್ಐ ಜಿಲ್ಲಾ ಕಾರ್ಯದರ್ಶಿ ಶುಯೇಬ್ ಖಾನ್ ಮಾತನಾಡಿ, ‘ದೇಶದಾದ್ಯಂತ ಎನ್.ಐ.ಎ - ಇ.ಡಿಗಳು ಯಾವುದೇ ಸಾಕ್ಷ್ಯಗಳಿಲ್ಲದೆ ಸಂಘಟನೆಯ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರ ಮೇಲೆ ದಾಳಿ ಅನ್ಯಾಯ ಮಾಡುತ್ತಿವೆ. ಭೀತಿಯ ವಾತಾವಾರಣ ನಿರ್ಮಾಣ ಮಾಡುತ್ತಿವೆ’ ಎಂದು ಆರೋಪಿಸಿದರು.
ಕೇಂದ್ರ ಸರ್ಕಾರ ಸ್ವಾಯತ್ರ ಸಂಸ್ಥೆಗಳನ್ನು ತನ್ನ ಕೈಗೊಂಬೆಗಳನ್ನಾಗಿ ಮಾಡಿಕೊಂಡಿದೆ. ಸರ್ವಾಧಿಕಾರಿ ಆಡಳಿತದ ಇಂತಹ ಬೆದರಿಕೆ ತಂತ್ರಗಳಿಗೆ ಪಿಎಫ್ ಹೆದವುರುವುದಿಲ್ಲ. ಸಂಘಟನೆಯು ತನ್ನ ನಿಲುವಿಗೆ ಬದ್ಧವಾಗಿದ್ದು, ದೇಶದ ಸಾಂವಿಧಾನಿಕ ಸ್ಫೂರ್ತಿ ಹಾಗೂ ಮೌಲ್ಯಗಳನ್ನು ಮರುಸ್ಥಾಪಿಸುವ ಹೋರಾಟದಲ್ಲಿ ದೃಢವಾಗಿ ನಿಲ್ಲಲಿದೆ’ ಎಂದರು.
ಎಸ್ಡಿಪಿಐ ಜಿಲ್ಲಾ ಘಟಕದ ಅಧ್ಯಕ್ಷ ಅಬ್ರಾರ್ ಅಹಮದ್ ಮಾತನಾಡಿದರು.ಪಿಎಫ್ಐ ಜಿಲ್ಲಾ ಅಧ್ಯಕ್ಷ ಕಫೀಲ್ ಅಹಮದ್,ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ ಜಿಲ್ಲಾ ಕಾರ್ಯದರ್ಶಿ ಮೌಲಾನ ಹಫೀಜ್ ಜಾವೀದ್, ಎನ್.ಡಬ್ಲ್ಯು.ಎಫ್ ಜಿಲ್ಲಾ ಅಧ್ಯಕ್ಷೆ ನೂರ್ ಅಸ್ಮ, ಎಸ್ಡಿಪಿಐ ನಗರಸಭೆ ಸದಸ್ಯರು ಸೇರಿದಂತೆ ಹಲವರು ಇದ್ದರು.