ಮಹದೇಶ್ವರ ಬೆಟ್ಟ: ಐತಿಹಾಸಿಕ ಧಾರ್ಮಿಕ ಸ್ಥಳ ಮಹದೇಶ್ವರ ಬೆಟ್ಟವನ್ನು ಸಂಪೂರ್ಣ ಪ್ಲಾಸ್ಟಿಕ್ ಮುಕ್ತ ಪ್ರದೇಶವನ್ನಾಗಿ ಮಾಡಲು ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಮತ್ತು ಅರಣ್ಯ ಇಲಾಖೆ ಜಂಟಿಯಾಗಿ ಕಾರ್ಯಕ್ರಮ ರೂಪಿಸಿವೆ.
ಮಹದೇಶ್ವರ ಬೆಟ್ಟವನ್ನು ಪ್ಲಾಸ್ಟಿಕ್ ಮುಕ್ತ ವಲಯವನ್ನಾಗಿ ಮಾಡಬೇಕು ಎಂದು ಜಿಲ್ಲಾಧಿಕಾರಿಯವರು ಈಗಾಗಲೇ ಆದೇಶ ಹೊರಡಿಸಿಸದ್ದಾರೆ.
ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಪ್ರಾಧಿಕಾರದ ಉಪಾಧ್ಯಕ್ಷರೂ ಆಗಿರುವ ಕೆ.ವೆಂಕಟೇಶ್ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ಸಭೆ ಹಾಗೂ ಜಿಲ್ಲಾಧಿಕಾರಿಯವರ ನೇತೃತ್ವದಲ್ಲಿ ಈ ಹಿಂದೆ ನಡೆದ ಸಭೆಯಲ್ಲಿ ಬೆಟ್ಟ ಹಾಗೂ ಪ್ರಾಧಿಕಾರಕ್ಕೆ ಸೇರಿದ ಸ್ಥಳಗಳಲ್ಲಿ ಪ್ರಕೃತಿಗೆ ಮಾರಕವಾಗಿರುವ ಪ್ಲಾಸ್ಟಿಕ್ ವಸ್ತುಗಳನ್ನು ಸಂಪೂರ್ಣವಾಗಿ ನಿಷೇಧಿಸುವ ಬಗ್ಗೆ ಚರ್ಚೆ ನಡೆದಿತ್ತು. ಇದಕ್ಕಾಗಿಯೇ ಒಂದು ವಿಶೇಷ ತಂಡವನ್ನು ರಚಿಸಲೂ ನಿರ್ಧರಿಸಲಾಗಿತ್ತು.
ಈ ನಿಟ್ಟಿನಲ್ಲಿ ಗುರುವಾರ ಪ್ರಾಧಿಕಾರದ ಕಾರ್ಯದರ್ಶಿ ಮತ್ತು ಮಲೆ ಮಹದೇಶ್ವರ ವನ್ಯಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ಜಿ.ಸಂತೋಷ್ ಕುಮಾರ್ ಹಾಗೂ ಸಿಬ್ಬಂದಿ ತಾಳಬೆಟ್ಟ, ವಡಕೆಹಳ್ಳ ಸೇರಿದಂತೆ ವಿವಿಧ ಕಡೆ ಸ್ಥಳ ಪರಿಶೀಲನೆ ನಡೆಸಿದರು.
ಮೊದಲ ಹಂತದಲ್ಲಿ ಕ್ಷೇತ್ರಕ್ಕೆ ಬರುವ ಭಕ್ತರಲ್ಲಿ ಪ್ಲಾಸ್ಟಿಕ್ ಬಳಕೆ ಮಾಡದಂತೆ ಜಾಗೃತಿ ಮೂಡಿಸಲು ಹಾಗೂ ಪ್ಲಾಸ್ಟಿಕ್ ತಪಾಸಣೆಗಾಗಿ ಈ ಪ್ರದೇಶಗಳಲ್ಲಿ ಚೆಕ್ಪೋಸ್ಟ್ ತೆರೆಯಲು ಚಿಂತನೆ ನಡೆಸಲಾಗಿದೆ ಎಂದು ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ಅವರು ತಿಳಿಸಿದ್ದಾರೆ.
ಪರಿಸರಕ್ಕೆ ಹಾನಿ: ಮಹದೇಶ್ವರ ಬೆಟ್ಟದಲ್ಲಿ ವಾರ್ಷಿಕವಾಗಿ ಆರು ಜಾತ್ರೆಗಳು ನಡೆಯುತ್ತವೆ. ಇದಲ್ಲದೇ ಪ್ರತಿ ಅಮಾವಾಸ್ಯೆ, ವಾರಾಂತ್ಯ ಹಾಗೂ ರಜಾ ದಿನಗಳಲ್ಲೂ ಜಾತ್ರೆಯ ವಾತಾವರಣ ಇರುತ್ತದೆ. ಜಾತ್ರೆಗಳಲ್ಲಿ ಭಾಗವಹಿಸಲು ಲಕ್ಷಾಂತರ ಭಕ್ತರು ಪಾದಯಾತ್ರೆ ಮೂಲಕ ಬರುತ್ತಾರೆ.
ವಾಹನಗಳಲ್ಲಿ ಹಾಗೂ ಕಾಲ್ನಡಿಗೆಯಲ್ಲಿ ಬರುವ ಭಕ್ತರು ಮಲೆ ಮಹದೇಶ್ವರ ವನ್ಯಧಾಮದಲ್ಲೇ ಸಾಗಬೇಕಾಗಿದೆ. ಭಕ್ತರು ಅರಣ್ಯ ದಾರಿಯಲ್ಲಿ, ಬೆಟ್ಟದ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲಿ, ಆಹಾರ ಪೊಟ್ಟಣ ಸೇರಿದಂತೆ ಪ್ಲಾಸ್ಟಿಕ್ ವಸ್ತುಗಳನ್ನು ಎಲ್ಲೆಂದರಲ್ಲಿ ಎಸೆಯುತ್ತಿದ್ದು, ಇದರಿಂದ ಪರಿಸರಕ್ಕೆ, ಕಾಡು ಪ್ರಾಣಿಗಳಿಗೆ ತೊಂದರೆಯಾಗುತ್ತಿದೆ.
ಬೆಟ್ಟದ ದಾರಿಯಲ್ಲಿ ಸಿಗುವ ವಡಕೆಹಳ್ಳ ಮತ್ತು ತಾಳಬೆಟ್ಟದಲ್ಲೇ ಭಕ್ತರಿಗೆ ಪ್ಲಾಸ್ಟಿಕ್ ಬಳಕೆಯ ಬಗ್ಗೆ ತಿಳಿಹೇಳುವುದರ ಜೊತೆಗೆ ಅವರ ಬಳಿಕ ಪ್ಲಾಸ್ಟಿಕ್ ವಸ್ತುಗಳಿವೆಯೇ ಎಂಬುದನ್ನು ತಪಾಸಣೆ ಮಾಡಿ ಬಿಟ್ಟರೆ, ಬೆಟ್ಟ ಹಾಗೂ ದಾರಿಯಲ್ಲಿ ಪ್ಲಾಸ್ಟಿಕ್ ಹಾವಳಿ ತಪ್ಪಿಸಬಹುದು ಎಂಬ ಲೆಕ್ಕಾಚಾರದಲ್ಲಿ ಅಧಿಕಾರಿಗಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.