ಚಾಮರಾಜನಗರ: ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕವು ಇದೇ 5ರಂದು ಜಿಲ್ಲೆಯ ನೂತನ ಶಾಸಕರು, ಸಚಿವರಿಗೆ ಹಾಗೂ ಸರ್ಕಾರಿ ನೌಕರರ ಪ್ರತಿಭಾವಂತ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಹಮ್ಮಿಕೊಂಡಿದೆ.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಚಂದ್ರಶೇಖರ್, ‘ಅಂದು ಬೆಳಿಗ್ಗೆ 11.30ಕ್ಕೆ ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಉದ್ಘಾಟಿಸಲಿದ್ದು, ಪ್ರತಿಭಾ ಪುರಸ್ಕಾರವನ್ನು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಮಾಡಲಿದ್ದು, ಮುಖ್ಯ ಅತಿಥಿಗಳಾಗಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್, ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಎ.ಆರ್. ಕೃಷ್ಣಮೂರ್ತಿ, ಎಚ್. ಎಂ. ಗಣೇಶ್ ಪ್ರಸಾದ್, ಎಂ.ಆರ್. ಮಂಜುನಾಥ್, ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್, ಎಸ್ಪಿ ಪದ್ಮಿನಿ ಸಾಹು, ಜಿಪಂ ಸಿಇಒ ಆನಂದ್ ಪ್ರಕಾಶ್ ಮೀನಾ, ಎಡಿಸಿ ಗೀತಾ ಹುಡೇದ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ’ ಎಂದರು.
ಅಲ್ಲದೇ ಜಿಲ್ಲೆಯಿಂದ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುವ ಸರ್ಕಾರಿ ನೌಕರರಾದ ಎ.ಎಂ.ಪ್ರಭಾಕರ್, ಮಂಜುನಾಥ್, ಪ್ರವೀಣ್ ಕುಮಾರ್, ಆರ್. ನಂದಿನಿ, ಶ್ವೇತಾದ್ರಿ, ಮಹಾಂತೇಶ್ ಹಾಗೂ ವೀಣಾ ಕೌಸರ್ ಅವರನ್ನು ಗೌರವಿಸಲಾಗುವುದು’ ಎಂದು ಹೇಳಿದರು.
‘ಸಂಜೆ 5ಗಂಟೆಗೆ ಸೈಬರ್ ಸೆಕ್ಯೂರಿಟಿ ಸಂಘ ಹಾಗೂ ಜಿಲ್ಲಾ ಸರ್ಕಾರಿ ನೌಕರರ ಸಂಘದ ಸಹಯೋಗದೊಂದಿಗೆ ಸೈಬರ್ ಅಪರಾಧಗಳಿಂದ ಸುರಕ್ಷಿತವಾಗಿರುವ ಕುರಿತು ಹಾಸ್ಯ ಸಂಜೆ ಹಮ್ಮಿಕೊಳ್ಳಲಾಗಿದೆ. ಕಲಾವಿದರಾದ ಗಂಗಾವತಿ ಪ್ರಾಣೇಶ್, ನರಸಿಂಹಮೂರ್ತಿ, ಸುಧಾ ಬರಗೂರು, ಗುಂಡೂರಾವ್, ಡುಂಡಿರಾಜ್ ಮತ್ತು ಬಸವರಾಜು ಮಹಾಮನಿ ಕಾರ್ಯಕ್ರಮ ನೀಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕು’ ಎಂದು ಮನವಿ ಮಾಡಿದರು.