ಚಾಮರಾಜನಗರ: ರಾಜ್ಯ ಸರ್ಕಾರ ಮರಾಠ ಅಭಿವೃದ್ದಿ ಪ್ರಾಧಿಕಾರ ಸ್ಥಾಪಿಸಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ಕುಮಾರ್ಶೆಟ್ಟಿ ಬಣ) ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಡಳಿತ ಭವನದ ಎದುರುಗಡೆ ಸೇರಿದ ಪ್ರತಿಭಟನನಿರತರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್.ಆನಂದ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಪ್ರತಿಭಟನೆ ನೇತೃತ್ವ ವಹಿಸಿದ್ದ ವೇದಿಕೆಯ ತಾಲ್ಲೂಕು ಅಧ್ಯಕ್ಷ ನವೀನ್ ಕ್ವಾಲಿಟಿ ಅವರು ಮಾತನಾಡಿ, ‘ರಾಜ್ಯ ಸರ್ಕಾರ ಕನ್ನಡ ಅಭಿವೃದ್ದಿ ಪ್ರಾಧಿಕಾರಕ್ಕೆ ಕೇವಲ ₹5 ಕೋಟಿ ನೀಡಿ ಮರಾಠ ಅಭಿವೃದ್ದಿ ಪ್ರಾಧಿಕಾರ ಸ್ಥಾಪನೆ ಮಾಡಿ ₹50 ಕೋಟಿ ಮೀಸಲಿಟ್ಟಿದೆ. ಇದು ಇಡೀ ರಾಜ್ಯದ ಜನರಿಗೆ ಮಾಡಿದ ಅವಮಾನ’ ಎಂದು ಆರೋಪಿಸಿದರು.
‘ಮರಾಠಿಗರು ಬೆಳಗಾವಿಯಲ್ಲಿ ಎಂಇಎಸ್ ಸಂಘಟನೆ ಕಟ್ಟಿಕೊಂಡು ಪದೇಪದೇ ಕನ್ನಡರ ಮೇಲೆ ಕ್ಯಾತೆ ತೆಗೆಯುತ್ತಿದ್ದಾರೆ. ಅಂತಹವರ ಹಿತಕ್ಕಾಗಿ ಸ್ಥಾಪಿಸಿರುವ ಮರಾಠ ಅಭಿವೃದ್ದಿ ಪ್ರಾಧಿಕಾರ ರದ್ದುಪಡಿಸಬೇಕು. ಇಲ್ಲದಿದ್ದರೆ ಸರ್ಕಾರದ ವಿರುದ್ಧ ಕನ್ನಡಿಗರು ಬೀದಿಗಿಳಿದು ಹೋರಾಟ ನಡೆಸಬೇಕಾಗುತ್ತದೆ’ ಎಂದರು.
ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಕಾರ್ಯಾಧ್ಯಕ್ಷ ಚಂದ್ರು ಉಮ್ಮತ್ತೂರು, ತಾಲ್ಲೂಕು ಕಾರ್ಯದರ್ಶಿಗಳಾದ ಅರ್ಜುನ್, ರಾಘು, ಗೌತಮ್, ಉಪಾಧ್ಯಕ್ಷರಾದ ಮಣಿ, ಶಿವಣ್ಣ, ಯುವ ಘಟಕದ ಅಧ್ಯಕ್ಷ ಕೌಶಿಕ್, ಬಾಬು, ಸಂತು, ರಘು, ನವೀನ್, ಗಿರಿ ಇದ್ದರು.