ಚಾಮರಾಜನಗರ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ರಾಜ್ಯ ಬಜೆಟ್ನಲ್ಲಿ ಜಿಲ್ಲೆಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು ಖಾಲಿ ರಟ್ಟಿನ ಪೆಟ್ಟಿಗೆ ಪ್ರದರ್ಶಿಸಿ ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.
ಭುವನೇಶ್ವರಿ ವೃತ್ತದಲ್ಲಿ ಸೇರಿದ ಪ್ರತಿಭಟನಕಾರರು ವಾಹನಗಳ ಸಂಚಾರ ತಡೆದರು. ರಟ್ಟಿನ ಖಾಲಿ ಪೆಟ್ಟಿಗೆಗಳನ್ನು ಪ್ರದರ್ಶಿಸಿ, ‘ಜಿಲ್ಲೆಯ ಪಾಲಿಗೆ ಬಜೆಟ್ ಖಾಲಿ ಡಬ್ಬ’ ಎಂದು ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.
ಸೇನಾ ಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸ ಗೌಡ ಮಾತನಾಡಿ ‘ನಗರದಲ್ಲಿ ಇತ್ತೀಚೆಗೆ ಪ್ರತಿಭಟನೆ ನಡೆಸಿ ಜಿಲ್ಲೆಯ ಬೇಡಿಕೆಗಳನ್ನು ಮುಂದಿಟ್ಟಿದ್ದೆವು. ಆದರೆ, ಸರ್ಕಾರ ಅವುಗಳನ್ನು ಪರಿಗಣಿಸಿಲ್ಲ’ ಎಂದು ಆರೋಪಿಸಿದರು.
‘ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಅನುದಾನ ಮೀಸಲಿಡಬೇಕು, ಚಾಮರಾಜನಗರಕ್ಕೆ 2ನೇ ಹಂತದ ಕುಡಿಯುವ ನೀರಿನ ಯೋಜನೆ ಜಾರಿಗೆ ತರಬೇಕು. ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಬೇಕು ಹಾಗೂ ವಿಶ್ವವಿದ್ಯಾಲಯ ಪುನಶ್ಚೇತನಕ್ಕೆ ₹1,000 ಕೋಟಿ ಅನುದಾನ ನೀಡಬೇಕು ಎಂದು ಆಗ್ರಹಿಸಿದ್ದೆವು. ಆದರೆ ಯಾವ ಬೇಡಿಕೆಗೂ ಸರ್ಕಾರ ಸ್ಪಂದಿಸಿಲ್ಲ. ಜಿಲ್ಲೆಗೆ ಅನ್ಯಾಯ ಮಾಡಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಗು.ಪುರುಷೋತ್ತಮ್, ಪಣ್ಯದಹುಂಡಿ ರಾಜು, ತಾಂಡವಮೂರ್ತಿ, ಲಿಂಗರಾಜು, ನಿಜಧ್ವನಿ ಗೋವಿಂದರಾಜ್, ಚಾ.ವೆಂ.ರಾಜ್ಗೋಪಾಲ್, ಚಾ.ರ.ಕುಮಾರ್, ಆಟೊ ನಾಗೇಶ್, ವೀರಭದ್ರ, ಮಹೇಶ್ಗೌಡ, ರವಿಚಂದ್ರ ಪ್ರಸಾದ್ ಇತರರು ಇದ್ದರು.