ಬೇಡಿಕೆ ಈಡೇರಿಕೆಗೆ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಆಗ್ರಹ
ಚಾಮರಾಜನಗರ: ಮಕ್ಕಳನ್ನು ಶಾಲೆಗೆ ಕಳುಹಿಸಲು ಹಾಗೂ ಶುಲ್ಕ ಪಾವತಿಸಲು ಆದೇಶ ನೀಡಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಪದಾಧಿಕಾರಿಗಳು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು, ಅಲ್ಲಿಂದ ಮೆರವಣಿಗೆಯಲ್ಲಿ ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿರಸ್ತೆ ಮೂಲಕ ಜಿಲ್ಲಾಡಳಿತ ಭವನಕ್ಕೆ ತೆರಳಿ ಪ್ರತಿಭಟನೆ ನಡೆಸಿದರು.
‘ಮಕ್ಕಳನ್ನು ಶಾಲೆಗೆ ದಾಖಲು ಮಾಡಲು ಪೋಷಕರಿಗೆ ಸರ್ಕಾರ ಕಟ್ಟುನಿಟ್ಟಿನ ಆದೇಶ ನೀಡಬೇಕು. ಶಾಲಾ ಶುಲ್ಕ ಪಾವತಿಸುವಂತೆ ಆದೇಶ ನೀಡಬೇಕು. ಮಾನ್ಯತೆ ನವೀಕರಣದ ಕಾನೂನು ಸಡಿಲಿಸಬೇಕು. ಶಿಕ್ಷಣ ಸಚಿವರು ಜವಾಬ್ದಾರಿಯುತ ಹೇಳಿಕೆ ನೀಡಬೇಕು’ ಎಂದು ಆಗ್ರಹಿಸಿದರು.
‘ಖಾಸಗಿ ಶಿಕ್ಷಕರಿಗೆ ಸರ್ಕಾರದಿಂದ ಗೌರವಧನ ನೀಡಬೇಕು. ಹೊಸ ಶಾಲೆಗಳಿಗೆ ನಿರ್ಬಂಧಿಸುವ ಕಾನೂನನ್ನು ಹಳೆಯ ಶಾಲೆಗಳಿಗೆ ನಿರ್ಬಂಧ ಇರಬಾರದು. ಶಿಕ್ಷಣ ಸಂಸ್ಥೆಗಳ ಸಮಸ್ಯೆಗಳನ್ನು ಆಲಿಸಲು ಸಮಿತಿಯನ್ನು ರಚನೆ ಮಾಡಬೇಕು. 2020–21ನೇ ಸಾಲಿನ ಆರ್ಟಿಇ ಶುಲ್ಕ ಮರುಪಾವತಿಗೆ ಕ್ರಮವಹಿಸಬೇಕು. ಶಿಕ್ಷಕರ ಕಲ್ಯಾಣ ನಿಧಿ ಪ್ರಯೋಜನವನ್ನು ಖಾಸಗಿ ಶಾಲಾ ಶಿಕ್ಷಕರಿಗೂ ವಿಸ್ತರಿಸಬೇಕು’ ಎಂದು ಒತ್ತಾಯಿಸಿದರು.
ಸ್ಥಳಕ್ಕೆ ಆಗಮಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಕಾತ್ಯಾಯಿನಿದೇವಿ ಅವರು, ಪ್ರತಿಭನಕಾರರಿಂದ ಮನವಿ ಸ್ವೀಕರಿಸಿದರು.
ಒಕ್ಕೂಟದ ಅಧ್ಯಕ್ಷ ನಂಜುಂಡಸ್ವಾಮಿ, ಕಾರ್ಯದರ್ಶಿ ಗಂಗಾಧರ್, ಮಾದೇಶ, ವೀರಭದ್ರಯ್ಯ, ಲಿಂಗರಾಜು, ಗೋವಿಂದರಾಜು, ಅಶ್ವಿನಿ, ಆಶಾ, ಸಿಂಧೂ ಇದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.