ಚಾಮರಾಜನಗರ: ತಾಲ್ಲೂಕಿನ ಮಲೆಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ರೈತರ ಚಿನ್ನವನ್ನು ಗಿರವಿ ಇಟ್ಟಿರುವುದನ್ನು ಬಿಡಿಸಿಕೊಡುವಂತೆ ಆಗ್ರಹಿಸಿ ಮತ್ತು ಸಂಘದಲ್ಲಿ ಅವ್ಯವಹಾರಕ್ಕೆ ಕಾರಣರಾದ ಆಡಳಿತ ಮಂಡಳಿಯವರನ್ನು ಬಂಧಿಸುವಂತೆ ಒತ್ತಾಯಿಸಿ ರೈತ ಸಂಘಟನೆಗಳ ಒಕ್ಕೂಟ ಮತ್ತು ಕಬ್ಬು ಬೆಳೆಗಾರರ ಸಂಘದ ಆಶ್ರಯದಲ್ಲಿ ರೈತರು ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆ ಎರಡನೇ ದಿನವಾದ ಮಂಗಳವಾರವೂ ಮುಂದುವರಿಯಿತು.
ಅಡವಿಟ್ಟ ಚಿನ್ನ ಬಿಡಿಸಿಕೊಡಲು ವಿಳಂಬ ಮಾಡುತ್ತಿರುವುದನ್ನು ಖಂಡಿಸಿ ಸೋಮವಾರ ಜಿಲ್ಲಾಡಳಿತ ಭವನದ ಮುಂದೆ ಪಿಎಸಿಸಿ ಸದಸ್ಯರು ಹಾಗೂ ರೈತ ಮುಖಂಡರು ಪ್ರತಿಭಟನೆ ಆರಂಭಿಸಿದ್ದರು.
ಕಬ್ಬು ಬೆಳೆಗಾರರ ಸಂಘದ ಚಾಮರಾಜನಗರ ತಾಲ್ಲೂಕು ಅಧ್ಯಕ್ಷ ಹಾಲಿನ ನಾಗರಾಜ್ ನೇತೃತ್ವದಲ್ಲಿ ಮಂಗಳವಾರ ಪ್ರತಿಭಟನೆ ನಡೆಯಿತು. ‘ನಮ್ಮ ಬೇಡಿಕೆ ಈಡೇರಿಸುವವರೆಗೂ ಪ್ರತಿಭಟನೆ ನಡೆಸಲಿದ್ದೇವೆ’ ಎಂದು ಪ್ರತಿಭಟನಕಾರರು ಹೇಳಿದರು.
ಮಲೆಯೂರು ಹರ್ಷ, ಮಲೆಯೂರು ಗ್ರಾಮ ಘಟಕದ ಅಧ್ಯಕ್ಷ ಬಸವರಾಜಪ್ಪ, ಮುಖಂಡರಾದ ಮಹೇಂದ್ರ, ಕಾಳಪ್ಪ, ಅರಳಿ ಕಟ್ಟೆ ಗ್ರಾಮ ಘಟಕದ ಅಧ್ಯಕ್ಷ ಕುಮಾರ್, ಪ್ರಭುಸ್ವಾಮಿ, ಸಿದ್ದಪ್ಪ, ಉಡಿಗಾಲ ಗ್ರಾಮ ಘಟಕದ ಅಧ್ಯಕ್ಷ ಮಂಜುನಾಥ್, ಮಹದೇವಸ್ವಾಮಿ, ಕಿಳಲಿಪುರ ಗ್ರಾಮ ಘಟಕದ ಅಧ್ಯಕ್ಷ ನಂದೀಶ್ ಹರಳಿಕಟ್ಟೆ, ಪುಷ್ಪಲತಾ ನಾಗಮ್ಮ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.