ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಳೆ: ಮುನ್ನೆಚ್ಚರಿಕೆ ವಹಿಸಲು ಚಾಮರಾಜನಗರ ಡಿ.ಸಿ ಸೂಚನೆ

ಜನ ಜಾನುವಾರು ಜೀವ ಹಾನಿಯಾಗದಂತೆ ನೋಡಿಕೊಳ್ಳಿ: ಶಿಲ್ಪಾನಾಗ್‌
Published 23 ಮೇ 2024, 16:16 IST
Last Updated 23 ಮೇ 2024, 16:16 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯಾದ್ಯಂತ ಮುಂಗಾರು ಪೂರ್ವ ಮಳೆ ಆರಂಭಗೊಂಡಿದ್ದು, ಮಳೆಯಿಂದಾಗಿ ಸಂಭವಿಸಬಹುದಾದ ಯಾವುದೇ ಜನ-ಜಾನುವಾರು ಹಾನಿಯನ್ನು ತಪ್ಪಿಸಲು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅಧಿಕಾರಿಗಳಿಗೆ ಗುರುವಾರ ಸೂಚಿಸಿದರು.

ಜಿಲ್ಲೆಯ ಬರ ಪರಿಸ್ಥಿತಿ ಮತ್ತು ಮುಂಗಾರು ನಿರ್ವಹಣೆ ಸಂಬಂಧ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ‘ಜಿಲ್ಲೆಯಲ್ಲಿ ವಾರದಿಂದ ಸತತವಾಗಿ ಮಳೆಯಾಗುತ್ತಿದ್ದು, ವಾಡಿಕೆಗಿಂತ ಅಧಿಕ ಮಳೆಯಾಗಿದೆ. ತೀವ್ರ ಮಳೆಯಿಂದ ಆಗಬಹುದಾದ ಅನಾಹುತಗಳನ್ನು ತಡೆಗಟ್ಟಲು ಜಿಲ್ಲಾಮಟ್ಟದ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು. ಜಿಲ್ಲೆಯ ಎಲ್ಲ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳು ಈ ನಿಟ್ಟಿನಲ್ಲಿ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮಳೆಯಿಂದ ಉಂಟಾಗುವ ಜೀವಹಾನಿ ತಡೆಯಲು ಸನ್ನದ್ಧರಾಗಿರಬೇಕು’ ಎಂದು ಸೂಚಿಸಿದರು. 

‍ಕ್ಷೇತ್ರ ಪ್ರವಾಸ ಮಾಡಿ: ‘ಮನೆ ಹಾನಿ ಮತ್ತು ಗುಡುಗು ಸಿಡಿಲಿನಿಂದ ಜನ-ಜಾನುವಾರು ಹಾನಿ ತಡೆಯಲು ಎಲ್ಲ ಅಧಿಕಾರಿಗಳು ಕ್ಷೇತ್ರ ಪ್ರವಾಸ ಮಾಡಬೇಕು. ಸಮಸ್ಯೆಗಳ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗುವ ಮೊದಲೇ ಅವುಗಳನ್ನು ಪರಿಹರಿಸಬೇಕು. ಜಿಲ್ಲೆಯ ಯಾವುದೇ ಭಾಗದಲ್ಲಿ ಪ್ರಕೃತಿ ವಿಕೋಪ ಉಂಟಾದರೂ ಅದನ್ನು ತ್ವರಿತವಾಗಿ ನಿಭಾಯಿಸಲು ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಪ್ರಾಣಹಾನಿ ಸಂಭವಿಸಿದರೆ ಪರಿಹಾರ ವಿತರಣೆಯಲ್ಲಿ ವಿಳಂಬವಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು. 

‘ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ  ನೀರು ಸರಬರಾಜು ಮಾಡಬೇಕು. ಈ ಬಾರಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ಇದೆ. ಮಳೆನೀರು ಕಲುಷಿತಗೊಳ್ಳದಂತೆ ಗಮನ ಹರಿಸಬೇಕು. ಕುಡಿಯುವ ನೀರಿನ ಪೈಪ್‍ಲೈನ್‍ಗೆ ಮಣ್ಣು ಹಾಗೂ ಯುಜಿಡಿ ನೀರು ಸೇರಿ ಆರೋಗ್ಯ ಸಮಸ್ಯೆಗಳಾಗದಂತೆ ಎಚ್ಚರ ವಹಿಸಬೇಕು. ಈ ಸಂಬಂಧ ಎಲ್ಲ ತಾಲ್ಲೂಕುಗಳ ತಹಶೀಲ್ದಾರರು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ತಪ್ಪಿದ್ದಲ್ಲಿ ಗಂಭೀರವಾಗಿ ಪರಿಗಣಿಸಲಾಗುವುದು’ ಎಂದರು.

‘ಜಿಲ್ಲೆಯಲ್ಲಿ ವಾರದಿಂದೀಚೆಗೆ ತೀವ್ರಗೊಂಡಿರುವ ಮಳೆ-ಗಾಳಿಯಿಂದ ಸಾಕಷ್ಟು ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯಾಗಿದೆ. ಅದರಲ್ಲೂ 980 ಹೆಕ್ಟೇರ್‌ಗೂ ಹೆಚ್ಚು ಪ್ರದೇಶದಲ್ಲಿ ಬಾಳೆ ಬೆಳೆಹಾನಿ ಕಂಡುಬಂದಿದ್ದು, ಅಧಿಕಾರಿಗಳು ತಕ್ಷಣವೇ ಕ್ಷೇತ್ರಪ್ರವಾಸ ಕೈಗೊಂಡು ಸ್ಥಳ ಮಹಜರು ಮಾಡಿ ರೈತರಿಗೆ ಪರಿಹಾರ ವಿತರಣೆ ಮಾಡಬೇಕು. ರೈತರಿಂದ ಯಾವುದೇ ದೂರುಗಳು ಬರದಂತೆ ಅಧಿಕಾರಿಗಳು ಕ್ರೀಯಾಶೀಲರಾಗಬೇಕು. ಜನರ ನಂಬಿಕೆ, ವಿಶ್ವಾಸ ಗಳಿಸಬೇಕು’ ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.

‘ವಿದ್ಯುತ್ ಅವಘಡ ಉಂಟಾಗದಂತೆ ನಿಗಾವಹಿಸಬೇಕು. ಸಾರ್ವಜನಿಕರು ವಿದ್ಯುತ್‍ಗೆ ಸಂಬಂಧಿಸಿದಂತೆ ದೂರುಗಳಿಗೆ ಕರೆ ಮಾಡಿದಲ್ಲಿ ತಕ್ಷಣವೇ ಸ್ಪಂದಿಸಬೇಕು. ಅಧಿಕ ಮಳೆಗಾಳಿಯಿಂದ ರಸ್ತೆಗಳಲ್ಲಿ ವಿದ್ಯುತ್ ತಂತಿ ಬಿದ್ದ ಸಂದರ್ಭದಲ್ಲಿ ಸಾರ್ವಜನಿಕರಿಗೆ ತೊಂದರೆಗಳಾಗದಂತೆ ಅಧಿಕಾರಿಗಳು ಸ್ಥಳದಲ್ಲಿದ್ದು, ಸಮಸ್ಯೆ ಬಗೆಹರಿಸಬೇಕು’ ಎಂದು ಜಿಲ್ಲಾಧಿಕಾರಿಯವರು ಸೆಸ್ಕ್‌ ಅಧಿಕಾರಿಗಳಿಗೆ ಸೂಚಿಸಿದರು.

ಪ್ರವಾಹ ಪರಿಸ್ಥಿತಿ ನಿಭಾಯಿಸಲು ಮುತುವರ್ಜಿ ವಹಿಬೇಕು. ಪ್ರವಾಹ ಉಂಟಾದರೆ ಕಾಳಜಿ ಕೇಂದ್ರಗಳನ್ನು ತೆರೆದು ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಬೇಕು ಎಂದು ಶಿಲ್ಪಾ ನಾಗ್‌ ಹೇಳಿದರು. 

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ತಹಶೀಲ್ದಾರರು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ರಸ್ತೆ ಗುಂಡಿ ಮುಚ್ಚಿ
‘ಮಳೆಯಿಂದ ರಸ್ತೆಗಳಲ್ಲಿ ಉಂಟಾಗುವ ಗುಂಡಿಗಳನ್ನು ಶೀಘ್ರವಾಗಿ ಮುಚ್ಚುವ ಕೆಲಸ ಆಗಬೇಕು. ಇದರಿಂದ ಅಪಘಾತಗಳು ಕಡಿಮೆಯಾಗಿ ವಾಹನ ಸವಾರರಿಗೆ ಅನುಕೂಲವಾಗವಾಲಿದೆ. ನಗರದಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗಲು ರಾಜಕಾಲುವೆ ಹಾಗೂ ಇತರೆ ಚರಂಡಿ ಮಾರ್ಗಗಳನ್ನು ಸ್ವಚ್ಛಗೊಳಿಸಲು ಕೂಡಲೇ ಕ್ರಮವಹಿಸಬೇಕು. ಕಟ್ಟಿಕೊಂಡಿರುವ ಚರಂಡಿಗಳಲ್ಲಿ ಹೂಳೆತ್ತಿಸಿ ಸ್ವಚ್ಚಗೊಳಿಸಬೇಕು’ ಎಂದು ಜಿಲ್ಲಾಧಿಕಾರಿ ಸೂಚಿಸಿದರು. ‘ಜಿಲ್ಲೆಯಲ್ಲಿರುವ ಕ್ವಾರಿಗಳಲ್ಲಿ ನೀರು ನಿಲ್ಲುವುದರಿಂದ ಅವಘಡಗಳು ಜರುಗದಂತೆ ನೋಡಿಕೊಳ್ಳಬೇಕು. ಜನರು ಕ್ವಾರಿಯ ಸುತ್ತ ಒಡಾಡದಂತೆ ಬೇಲಿ ಮಾಡುವ ಕಾರ್ಯ ತ್ವರಿತಗತಿಯಲ್ಲಿ ಆಗಬೇಕು. ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಕ್ವಾರಿಗಳ ಉಸ್ತುವಾರಿಗೆ ತಾಲ್ಲೂಕು ಮಟ್ಟದ ನೋಡೆಲ್ ಅಧಿಕಾರಿಗಳನ್ನು ನೇಮಿಸಬೇಕು’ ಎಂದು ಹೇಳಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT