ಚಾಮರಾಜನಗರ: ಜಿಲ್ಲೆಯಾದ್ಯಂತ ಬುಧವಾರ ಭಕ್ತಿ ಭಾವ, ಸಡಗರಗಳಿಂದ ಸಂಕ್ರಾಂತಿ ಹಬ್ಬವನ್ನು ಆಚರಿಸಲಾಯಿತು. ಎಳ್ಳು– ಬೆಲ್ಲ, ಕಬ್ಬಿನ ಸವಿ, ಸುಗ್ಗಿ ಹಬ್ಬದ ಸಂಭ್ರಮವನ್ನು ಇನ್ನಷ್ಟು ಹೆಚ್ಚಿಸಿದವು.
ಹೊಸ ವರ್ಷದ ಮೊದಲ ಹಬ್ಬದ ಅಂಗವಾಗಿ ಜಿಲ್ಲೆಯ ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳು ನಡೆದವು. ಜನರು ಕೂಡ ಕುಟುಂಬ ಸಮೇತರಾಗಿ ದೇವಸ್ಥಾನಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಜನರುಎಳ್ಳು ಬೆಲ್ಲವನ್ನು ಸ್ನೇಹಿತರು, ನೆಂಟರಿಷ್ಟರಿಗೆ ಹಂಚಿ ಸಂಭ್ರಮಿಸಿದರು. ಮನೆಗಳಲ್ಲಿ ಪೊಂಗಲ್ ಸೇರಿದಂತೆ ವಿಶೇಷ ಅಡುಗೆ ಸಿದ್ಧಪಡಿಸಿ ಬಂಧುಗಳನ್ನು ಆಹ್ವಾನಿಸಿ ಬಡಿಸಿದರು. ತಮಿಳು ಭಾಷಿಕರು ಹೆಚ್ಚಿನ ಸಂಖ್ಯೆಯಲ್ಲಿರುವ ಪ್ರದೇಶಗಳಲ್ಲಿ ಹಬ್ಬ ಆಚರಣೆ ಜೋರಾಗಿತ್ತು.
ಗೋವುಗಳಿಗೆ ಪೂಜೆ: ನಗರ ಪ್ರದೇಶಗಳಲ್ಲಿ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಜನರು ಹಸುಗಳಿಗೆ ಪೂಜೆ ಸಲ್ಲಿಸಿದರು.
ಗ್ರಾಮೀಣ ಪ್ರದೇಶಗಳಲ್ಲಿ ರೈತರು ಹೊಸ ಫಸಲುಗಳಿಗೆ ಪೂಜೆ ಸಲ್ಲಿಸುವುದರ ಮೂಲಕ ಸಂಕ್ರಾಂತಿಯನ್ನು ವಿಶಿಷ್ಟವಾಗಿ ಆಚರಿಸಿದರು. ಹಬ್ಬದ ಅಂಗವಾಗಿ, ಸಂಜೆ ಹೊತ್ತು ಎತ್ತುಗಳನ್ನು ಕಿಚ್ಚು ಹಾಯಿಸಿ ಸಂಭ್ರಮಿಸಿದರು.