ಚಾಮರಾಜನಗರ: ಜಿಲ್ಲೆಯಲ್ಲಿ ಮಂಗಳವಾರ ಏಳು ಕೋವಿಡ್ ಪ್ರಕರಣ ವರದಿಯಾಗಿವೆ. 14 ಮಂದಿ ಗುಣಮುಖರಾಗಿದ್ದಾರೆ. ಸಾವು ಸಂಭವಿಸಿಲ್ಲ.
ಗುಣಮುಖರಾದವರ ಸಂಖ್ಯೆ ಹೆಚ್ಚು ಇರುವುದರಿಂದ ಸೋಂಕಿತರ ಸಂಖ್ಯೆ 59ಕ್ಕೆ ಇಳಿದಿದೆ. ಒಬ್ಬರು ಐಸಿಯುನಲ್ಲಿದ್ದಾರೆ. 18 ಮಂದಿ ಹೋಂ ಐಸೋಲೇಷನ್ನಲ್ಲಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ 32,371 ಮಂದಿಗೆ ಕೊರೊನಾ ವೈರಸ್ ತಗುಲಿದೆ. 31,775 ಮಂದಿ ಗುಣಮುಖರಾಗಿದ್ದಾರೆ. ಕೋವಿಡ್ ಹಾಗೂ ಕೋವಿಡ್ಯೇತರ ಕಾರಣಗಳಿಂದ 578 ಮಂದಿ ಸೋಂಕಿತರು ಪ್ರಾಣ ಕಳೆದುಕೊಂಡಿದ್ದಾರೆ.
ಮಂಗಳವಾರ 1,327 ಮಂದಿಯ ಕೋವಿಡ್ ಪರೀಕ್ಷಾ ವರದಿ ಬಂದಿದ್ದು, 1,320 ಮಂದಿಯ ವರದಿಗಳು ನೆಗೆಟಿವ್ ಬಂದಿವೆ. ಏಳು ಮಂದಿಗೆ ಕೋವಿಡ್ ದೃಢಪಟ್ಟಿದೆ. ಈ ಪೈಕಿ ಹನೂರು ತಾಲ್ಲೂಕಿನ ನಾಲ್ವರು, ಚಾಮರಾಜನಗರ ತಾಲ್ಲೂಕಿನ ಇಬ್ಬರು, ಗುಂಡ್ಲುಪೇಟೆ ತಾಲ್ಲೂಕಿನ ಒಬ್ಬರಿದ್ದಾರೆ.
ಕಟ್ಟೆಚ್ಚರ: ಈ ಮಧ್ಯೆ, ನೆರೆಯ ಕೇರಳದಲ್ಲಿ ಮತ್ತೆ ನಿಫಾ ವೈರಸ್ ಸೋಂಕು ಕಾಣಿಸಿಕೊಂಡಿರುವುದರಿಂದ ಜಿಲ್ಲೆಯ ಗಡಿ ಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
‘ಚೆಕ್ಪೋಸ್ಟ್ಗಳಲ್ಲಿರುವ ಸಿಬ್ಬಂದಿಗೆ, ಎಲ್ಲಾ ವೈದ್ಯರಿಗೆ, ಆಶಾ ಕಾರ್ಯಕರ್ತರಿಗೆ ನಿಫಾ ವೈರಸ್ ಬಗ್ಗೆ ಮಾಹಿತಿ ನೀಡಲಾಗಿದೆ. ಗಡಿ ಭಾಗದ ಜನರಲ್ಲಿ ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳಲಾಗಿದೆ. ಯಾರಲ್ಲಾದರೂ ಸೋಂಕಿನ ಲಕ್ಷಣಗಳು ಕಂಡು ಬಂದರೆ ತಕ್ಷಣ ತಿಳಿಸಬೇಕು ಎಂದು ಸೂಚನೆ ನೀಡಲಾಗಿದೆ. ನಿಫಾ ವೈರಸ್ ಸೋಂಕಿಗೆ ಪ್ರತ್ಯೇಕ ಚಿಕಿತ್ಸೆ ಇಲ್ಲ. ರೋಗ ಲಕ್ಷಣ ಆಧಾರದಲ್ಲಿ ಚಿಕಿತ್ಸೆ ನೀಡಲಾಗುತ್ತದೆ’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಜೆ.ಎಂ.ವಿಶ್ವೇಶ್ವರಯ್ಯ ‘ಪ್ರಜಾವಾಣಿ’ಗೆ ತಿಳಿಸಿದರು.