ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಳ್ವಾಡಿ ದುರಂತ: ಆರೋಪಿಗಳು ಇಂದು ಕೋರ್ಟ್‌ಗೆ ಹಾಜರು

ನಾಲ್ವರ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯ
Last Updated 2 ಜನವರಿ 2019, 20:00 IST
ಅಕ್ಷರ ಗಾತ್ರ

ಕೊಳ್ಳೇಗಾಲ: ಹನೂರು ತಾಲ್ಲೂಕಿನ ಸುಳ್ವಾಡಿ ಮಾರಮ್ಮ ದೇವಾಲಯದ ವಿಷ ಪ್ರಸಾದ ಪ್ರಕರಣದ ನಾಲ್ವರು ಆರೋಪಿಗಳಾದ ಇಮ್ಮಡಿ ಮಹಾದೇವಸ್ವಾಮಿ, ಅಂಬಿಕಾ, ಮಾದೇಶ ಮತ್ತು ದೊಡ್ಡಯ್ಯ ಅವರ ನ್ಯಾಯಾಂಗ ಬಂಧನದ ಅವಧಿ ಗುರುವಾರ ಕೊನೆಗೊಳ್ಳಲಿದೆ.

ಮೈಸೂರಿನ ಕೇಂದ್ರ ಕಾರಾಗೃಹದಲ್ಲಿ ಇರುವ ನಾಲ್ವರನ್ನು ಪೊಲೀಸರು ಗುರುವಾರ ಕೊಳ್ಳೇಗಾಲದ ಪ್ರಧಾನ ಸಿವಿಲ್‌ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.

‘ಬೆಳಿಗ್ಗೆ 11ರ ನಂತರ ಆರೋಪಿಗಳನ್ನು ಹಾಜರು ಪಡಿಸಲಾಗುವುದು’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಧರ್ಮೇಂದರ್‌ ಕುಮಾರ್‌ ಮೀನಾ ತಿಳಿಸಿದ್ದಾರೆ.

ಡಿ.14ರಂದು ನಡೆದಿದ್ದ ದುರಂತ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ನಾಲ್ವರು ಆರೋಪಿಗಳ ವಿಚಾರಣೆ ಹಾಗೂ ಸ್ಥಳ ಮಹಜರು ನಡೆಸಿದ ನಂತರ ಪೊಲೀಸರು ಡಿ.21ರ ತಡರಾತ್ರಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದರು. ನ್ಯಾಯಾಧೀಶರು ನಾಲ್ವರನ್ನೂ ಜನವರಿ 3ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.

ವಕೀಲರು ವಕಾಲತ್ತು ವಹಿಸುತ್ತಾರಾ?: ಆರೋಪಿಗಳಿಗೆ ಜಾಮೀನು ಕೊಡಿಸುವ ಪ್ರಯತ್ನ ತೆರೆಮರೆಯಲ್ಲಿ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ.

ಆರೋಪಿಗಳ ಪರ ಯಾರೊಬ್ಬರೂ ವಕಾಲತ್ತು ವಹಿಸುವುದಿಲ್ಲ ಎಂದು ಜಿಲ್ಲಾ ವಕೀಲರ ಸಂಘ ಈಗಾಗಲೇ ಘೋಷಿಸಿದೆ. ಮೈಸೂರಿನ ವಕೀಲ ಮಹದೇವಸ್ವಾಮಿ ಎಂಬುವವರು ಆರೋಪಿಗಳ ಪರ ವಾದ ಮಂಡಲು ಈ ಮುಂದೆ ಬಂದಿದ್ದರು. ಡಿ.27ರಂದು ನ್ಯಾಯಾಲಯಕ್ಕೂ ಭೇಟಿ ನೀಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನೂ ಕಲೆ ಹಾಕಿದ್ದರು. ಆದರೆ, ಈ ಪ್ರಕರಣದಲ್ಲಿ ವಕಾಲತ್ತು ವಹಿಸುವುದಿಲ್ಲ ಎಂದು ಎರಡು ದಿನಗಳ ಹಿಂದೆ ಅವರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಹಾಗಾಗಿ, ಆರೋಪಿಗಳ ಪರವಾಗಿ ಬೇರೆ ಯಾರಾದರೂ ಹಾಜರಾಗಲಿದ್ದಾರೆಯೇ ಎಂಬ ಪ್ರಶ್ನೆ ಎದ್ದಿದೆ.

ಸಾರ್ವಜನಿಕ ವಲಯದಲ್ಲಿ ಈ ಬಗ್ಗೆ ಚರ್ಚೆಯೂ ನಡೆಯುತ್ತಿದೆ. ಮೈಸೂರಿನಿಂದ ವಕೀಲರು ಬರದಿದ್ದರೆ, ಬೆಂಗಳೂರಿನಿಂದ ಬರುವ ಸಾಧ್ಯತೆಯೂ ಇದೆ ಎಂದು ಹೇಳಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT