ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ: ದಲಿತ ಮಹಿಳೆ ನೀರು ಕುಡಿದಿದ್ದಕ್ಕೆ ಟ್ಯಾಂಕ್‌ ಖಾಲಿ ಮಾಡಿದರು!

Last Updated 20 ನವೆಂಬರ್ 2022, 6:47 IST
ಅಕ್ಷರ ಗಾತ್ರ

ಚಾಮರಾಜನಗರ: ತಾಲ್ಲೂಕಿನ ಹೆಗ್ಗೋಠಾರ ಗ್ರಾಮದಲ್ಲಿ ದಲಿತ ಮಹಿಳೆಯೊಬ್ಬರು ಕಿರು ನೀರು ಸರಬರಾಜು ಟ್ಯಾಂಕ್‌ ನಲ್ಲಿಯಲ್ಲಿ ನೀರು ಕುಡಿದರೆಂಬ ಕಾರಣಕ್ಕೆ ಅದರಲ್ಲಿದ್ದ ನೀರೆಲ್ಲವನ್ನೂ ಶುಕ್ರವಾರ ಮಧ್ಯಾಹ್ನ ಹೊರಕ್ಕೆ ಹರಿಸಿ, ಗೋಮೂತ್ರದಿಂದ ಶುದ್ಧೀಕರಿಸಲಾಗಿದೆ. ಎಲ್ಲ ನಲ್ಲಿಗಳಿಂದಲೂ ನೀರನ್ನು ಹರಿಸುತ್ತಿರುವ ವಿಡಿಯೊವನ್ನು ವ್ಯಕ್ತಿಯೊಬ್ಬರು ಫೇಸ್‌ಬುಕ್‌ನಲ್ಲಿ ಹಾಕಿದ್ದಾರೆ.

ಘಟನೆಯು ತಾಲ್ಲೂಕು ಆಡಳಿತದ ಗಮನಕ್ಕೆ ಬಂದಿದ್ದು, ಸ್ಥಳೀಯ ಕಂದಾಯ ನಿರೀಕ್ಷಕ ಸೇರಿದಂತೆ ಅಧಿಕಾರಿಗಳು ಶನಿವಾರ ಗ್ರಾಮಕ್ಕೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದು, ತಹಶೀಲ್ದಾರ್‌ಗೆ ವರದಿ ನೀಡಿದ್ದಾರೆ.

‘ಪರಿಶಿಷ್ಟ ಜಾತಿಗೆ ಸೇರಿದ ಯುವಕನೊಬ್ಬನ ಮದುವೆ ಶುಕ್ರವಾರ ಗ್ರಾಮದಲ್ಲಿ ನಡೆದಿತ್ತು. ವಧುವಿನ ಕಡೆಯವರು ಎಚ್‌.ಡಿ.ಕೋಟೆ ತಾಲ್ಲೂಕಿನ ಸರಗೂರಿನಿಂದ ಬಂದಿದ್ದರು. ಮಧ್ಯಾಹ್ನದ ಊಟ ಮುಗಿಸಿ ಬಸ್‌ಗೆ ಹೋಗುವ ಸಂದರ್ಭದಲ್ಲಿ ಮಹಿಳೆಯೊಬ್ಬರು ಗ್ರಾಮದ ಹಳೆ ಮಾರಿಗುಡಿ ಬಳಿ ಲಿಂಗಾಯತರ ಬೀದಿಯಲ್ಲಿರುವ ತೊಂಬೆಯ ನಲ್ಲಿಯಲ್ಲಿ ನೀರು ಕುಡಿದಿದ್ದಾರೆ. ಅದೇ ಬೀದಿಯವರು ಯಾರೋ ಇದನ್ನು ನೋಡಿದ್ದಾರೆ. ಮಹಿಳೆ ದಲಿತ ಸಮುದಾಯದವಳು ಎಂದು ಗೊತ್ತಾಗುತ್ತಿದ್ದಂತೆ ಆಕೆಗೆ ಬೈದಿದ್ದಾರೆ. ನಂತರ ಎಲ್ಲ ನಲ್ಲಿಯನ್ನು ತೆರೆದು ನೀರು ಖಾಲಿ ಮಾಡಿ ಗಂಜಲ ಹಾಕಿ ಸ್ವಚ್ಛಗೊಳಿಸಿದ್ದಾರೆ’ ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಗ್ರಾಮಸ್ಥರೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.

ಶನಿವಾರ ಕಂದಾಯ ನಿರೀಕ್ಷಕ ಹಾಗೂ ಗ್ರಾಮಲೆಕ್ಕಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಪರಿಶಿಷ್ಟ ಜಾತಿಯ 20ಕ್ಕೂ ಯುವಕರು ಘಟನೆ ನಡೆದಿರುವ ಬಗ್ಗೆ ಲಿಖಿತವಾಗಿ ದೃಢಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಪ್ಪಿತಸ್ಥರ ವಿರುದ್ಧ ಕ್ರಮ: ಘಟನೆ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿರುವ ಚಾಮರಾಜನಗರ ತಾಲ್ಲೂಕು ತಹಶೀಲ್ದಾರ್‌ ಐ.ಇ.ಬಸವರಾಜು, ‘ಈ ಬಗ್ಗೆ ಮಾಹಿತಿ ಬಂದಿದೆ. ಶನಿವಾರ ಕಂದಾಯ ನಿರೀಕ್ಷಕರನ್ನು ಕಳುಹಿಸಿ ವರದಿ ಪಡೆದಿದ್ದೇನೆ. ಅದರ ಆಧಾರದಲ್ಲಿ, ಗ್ರಾಮಕ್ಕೆ ತೆರಳಿ ಸ್ಥಳೀಯರನ್ನು ವಿಚಾರಿಸಿ ಸಂಪೂರ್ಣ ಮಾಹಿತಿ ಕಲೆ ಹಾಕಿ ಸಮಗ್ರ ವರದಿ ನೀಡಲು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಸೂಚಿಸುತ್ತೇನೆ. ಗ್ರಾಮದಲ್ಲಿ ಎಲ್ಲ ಸಮುದಾಯದವರ ಸಭೆ ನಡೆಸಿ, ಘಟನೆ ನಡೆದಿರುವುದು ನಿಜವೇ ಆಗಿದ್ದರೆ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT