ಮಹದೇಶ್ವರ ಬೆಟ್ಟ (ಚಾಮರಾಜನಗರ): ಪ್ರಸಿದ್ಧ ಯಾತ್ರಾಸ್ಥಳ ಮಹದೇಶ್ವರ ಬೆಟ್ಟದ ಮಲೆ ಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ಯುಗಾದಿ ಜಾತ್ರಾ ಮಹೋತ್ಸವದ ಅಂಗವಾಗಿ ಮಾದಪ್ಪನ ರಥೋತ್ಸವ ಮಂಗಳವಾರ ಬೆಳಿಗ್ಗೆ ವಿಜೃಂಭಣೆಯಿಂದ ನೆರವೇರಿತು.
ಜಿಲ್ಲೆ ಮಾತ್ರವಲ್ಲದೆ ಹೊರ ಜಿಲ್ಲೆ, ಹೊರ ರಾಜ್ಯಗಳಿಂದ ಬಂದ ಸಾವಿರಾರು ಭಕ್ತರು ರಥೋತ್ಸವಕ್ಕೆ ಸಾಕ್ಷಿಯಾದರು. ಉಘೇ ಮಾದಪ್ಪ, ಮಾಯ್ಕಾರ ಘೋಷಣೆಗಳು ಮುಗಿಲು ಮುಟ್ಟಿದವು.
ಮಂಗಳವಾರ ಬೆಳಿಗ್ಗೆ 7:30 ರಿಂದ 9:30ರ ನಡುವಿನ ಶುಭ ಮುಹೂರ್ತದಲ್ಲಿ ತೇರನ್ನು ಎಳೆಯಲಾಯಿತು.
ಬೇಡಗಂಪಣ ಸಮುದಾಯದ ಸಂಪ್ರದಾಯದಂತೆ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಸಮುದಾಯದ 101 ಹೆಣ್ಣು ಮಕ್ಕಳು ಬೆಲ್ಲದ ಆರತಿಯೊಂದಿಗೆ, ಸಾಲೂರು ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ನೇತೃತ್ವದಲ್ಲಿ ಮಹದೇಶ್ವರ ಸ್ವಾಮಿಯ ಉತ್ಸವ ಮೂರ್ತಿಯನ್ನು ಬಿಳಿ ಆನೆ ಮಂಟಪದಲ್ಲಿ ಪ್ರತಿಷ್ಠಾಪಿಸಲಾಯಿತು.