ಚಾಮರಾಜನಗರ: ತಾಲ್ಲೂಕಿನ ಹೆಗ್ಗೋಠಾರ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಮಹಿಳೆ ನೀರು ಕುಡಿದರು ಎಂಬ ಕಾರಣಕ್ಕೆ ನೀರು ಸರಬರಾಜು ಟ್ಯಾಂಕ್ ನೀರು ಖಾಲಿ ಮಾಡಿ ಗೋಮೂತ್ರದಿಂದ ಶುದ್ಧೀಕರಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳಿಂದ ಮಾಹಿತಿ ತರಿಸಿ ಕ್ರಮ ಕೈಗೊಳ್ಳುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಹೇಳಿದರು.
ನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ‘ಶನಿವಾರ ಸಂಜೆ ಮಾಹಿತಿ ಸಿಕ್ಕಿತು. ತಕ್ಷಣವೇ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳನ್ನು ಕಳುಹಿಸಿದ್ದೇನೆ. ಜಿಲ್ಲಾಧಿಕಾರಿ ಗಮನಕ್ಕೂ ತಂದಿದ್ದೇನೆ. ವಾಸ್ತವಾಂಶ ಏನುಬೆಂಬುದು ಗೊತ್ತಿಲ್ಲ. ಈ ಬಗ್ಗೆ ಅಧಿಕಾರಿಗಳಿಂದ ವರದಿ ತರಿಸುತ್ತೇನೆ’ಎಂದರು.
'ಇದು ನೋವಿನ ಸಂಗತಿ. ಇಂತಹದ್ದು ನಡೆಯಬಾರದು. ಎಲ್ಲರೂ ಒಂದೇ ತಕ್ಕಡಿಯಲ್ಲಿ ಬದುಕಬೇಕಾಗುತ್ತದೆ' ಎಂದರು.