ಚಾಮರಾಜನಗರ:ಗ್ರಾಮೀಣ ಜನರಿಗೆ ತರಕಾರಿ ಹಾಗೂ ಹಣ್ಣುಗಳ ಅಭಾವ ಉಂಟಾಗಬಾರದು ಎಂಬ ಉದ್ದೇಶದಿಂದ ತೋಟಗಾರಿಕಾ ಇಲಾಖೆ ಹಾಗೂ ಹಾಪ್ಕಾಮ್ಸ್ ಜಂಟಿಯಾಗಿ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ತರಕಾರಿ ಹಾಗೂ ಹಣ್ಣುಗಳನ್ನು ಮಾರಾಟ ಮಾಡಲು ಮುಂದಾಗಿದೆ.
ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಶುಕ್ರವಾರ ಜಿಲ್ಲಾಡಳಿತ ಭವನದ ಎದುರು ತರಕಾರಿ ಹಾಗೂ ಹಣ್ಣುಗಳ ಮಾರಾಟ ವಾಹನಕ್ಕೆ ಹಸಿರು ನಿಶಾನೆ ತೋರಿಸಿದರು.
ನಂತರ ಮಾತನಾಡಿದ ಅವರು, ‘ಆನ್ಆರ್ಎಲ್ಎನ್ ಸಿಬ್ಬಂದಿ ಬಳಸಿಕೊಂಡು ಎಲ್ಲ 130 ಗ್ರಾಮ ಪಂಚಾಯಿತಿಗಳಲ್ಲೂ ತರಕಾರಿ ಹಾಗೂ ಹಣ್ಣುಗಳನ್ನು ಮಾರಾಟ ಮಾಡಲಾಗುವುದು. ಗ್ರಾಮ ಪಂಚಾಯಿತಿ ಆದ ನಂತರ ಇತರ ಹಳ್ಳಿಗಳಿಗೂ ಇದನ್ನು ವಿಸ್ತರಿಸಲಾಗುವುದು’ ಎಂದು ಹೇಳಿದರು.
‘ಇದಲ್ಲದೇ, ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ಶನಿವಾರದಿಂದ ಸಂಚಾರಿ ವಾಹನಗಳ ಮೂಲಕ ಎಲ್ಲರಿಗೂ ಅಗತ್ಯ ವಸ್ತುಗಳನ್ನು ಪೂರೈಸುವ ಉದ್ದೇಶವನ್ನು ಹೊಂದಿದ್ದೇವೆ’ ಎಂದರು.
‘ಇದುವರೆಗೆ ಕಾಳಸಂತೆಯಲ್ಲಿ ವಸ್ತುಗಳ ಮಾರಾಟ, ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಪ್ರಕರಣಗಳು ಜಿಲ್ಲೆಯಲ್ಲಿ ಕಂಡು ಬಂದಿಲ್ಲ. ಈಗಿನ ಸ್ಥಿತಿಯನ್ನು ದರ್ಬಳಕೆ ಮಾಡಿಕೊಂಡರೆ ಅಂತಹ ವ್ಯಾಪಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇವೆ’ ಎಂದು ಪ್ರಶ್ನೆಯೊಂದಕ್ಕೆ ಜಿಲ್ಲಾಧಿಕಾರಿ ಉತ್ತರಿಸಿದರು.