ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಗವಿಕಲರನ್ನು ಮುಖ್ಯವಾಹಿನಿಗೆ ತರಲು ಸಹಕರಿಸಿ: ಸೋಮಣ್ಣ

ವಿಶ್ವ ಅಂಗವಿಕಲರ ದಿನಾಚರಣೆ, ಸಾಧಕ ಅಂಗವಿಕಲರಿಗೆ ಸನ್ಮಾನ
Last Updated 3 ಡಿಸೆಂಬರ್ 2022, 14:46 IST
ಅಕ್ಷರ ಗಾತ್ರ

ಚಾಮರಾಜನಗರ: ಅಂಗವಿಕಲರನ್ನು ಪ್ರೀತಿ, ಗೌರವದಿಂದ ಕಂಡು ಅವರನ್ನು ಮುಖ್ಯವಾಹಿನಿಗೆ ತರಲು ಪ್ರತಿಯೊಬ್ಬರೂ ನೆರವಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಶನಿವಾರ ತಿಳಿಸಿದರು.

ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ವಿವಿಧ ಇಲಾಖೆಗಳು, ಜಿಲ್ಲಾ ಅಂಗವಿಕಲರ ಕ್ಷೇಮಾಭಿವೃದ್ದಿ ಸಮಿತಿ ಹಾಗೂ ಸ್ಥಳೀಯ ಸ್ವಯಂ ಸೇವಾಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಅಂಗವಿಕಲರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸರ್ಕಾರವು ಅಂಗವಿಕಲರ ಅಭಿವೃದ್ಧಿಗೆ ಶ್ರಮಿಸುತ್ತಿದ್ದು, ಹಲವು ಸೌಲಭ್ಯ, ಸವಲತ್ತುಗಳನ್ನು ಕಲ್ಪಿಸಿದೆ. ಶೇ 40ರಷ್ಟು ಅಂಗವೈಕಲ್ಯ ಹೊಂದಿರುವವರಿಗೆ ಈ ಹಿಂದೆ ನೀಡುತ್ತಿದ್ದ ₹600 ಮಾಸಾಶನವನ್ನು ₹800ಕ್ಕೆ ಏರಿಸಲಾಗಿದೆ. ಶೇ 75ರಷ್ಟು ಅಂಗವೈಕಲ್ಯ ಇರುವವರಿಗೆ ₹12,000ರಿಂದ ₹1,400ಕ್ಕೆ ಏರಿಕೆ ಮಾಡಲಾಗಿದೆ. ಅಲ್ಲದೇ ಬುದ್ಧಿಮಾಂದ್ಯರಿಗೆ ₹1,200ರಿಂದ ₹2000ಕ್ಕೆ ಹೆಚ್ಚಿಸಲಾಗಿದೆ’ ಎಂದರು.

‘ಜಿಲ್ಲೆಯಲ್ಲಿ 20,460 ಅಂಗವಿಕಲರಿದ್ದಾರೆ. 206 ಅಂಗವಿಕಲರಿಗೆ ತ್ರಿಚಕ್ರ ವಾಹನ ವಿತರಣೆ ಮಾಡಲಾಗಿದೆ. ಅಂಗವಿಕಲರನ್ನು ವಿವಾಹವಾಗುವ ಅಂಗವಿಕಲರಿಗೆ ಸರ್ಕಾರದಿಂದ ₹50 ಸಾವಿರ ಪ್ರೋತ್ಸಾಹಧನ, ಲ್ಯಾಪ್‌ಟಾಪ್ ವಿತರಣೆ, 25 ಅಂಗವಿಕಲ ಮಕ್ಕಳಿಗೆ ಹಾಸ್ಟೆಲ್ ವ್ಯವಸ್ಥೆ, 993 ಅಂಗವಿಕಲರಿಗೆ ಅಗತ್ಯ ಸಲಕರಣೆ ವಿತರಣೆ ಮಾಡಲಾಗಿದೆ. ಹೆರಿಗೆಯಾಗುವ ದೃಷ್ಟಿದೋಷ ಹೊಂದಿರುವ ಹೆಣ್ಣು ಮಕ್ಕಳಿಗೆ ಎರಡು ವರ್ಷಗಳ ಕಾಲ ಪ್ರತಿ ತಿಂಗಳು ₹2000 ಶಿಶುಪಾಲನಾ ಭತ್ಯೆ ನೀಡಲಾಗುತ್ತಿದೆ’ ಎಂದು ಸಚಿವರು ತಿಳಿಸಿದರು.

‘ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಸರ್ಕಾರದ ಯೋಜನೆಗಳ ಕುರಿತು ಅಂಗವಿಕಲರಿಗೆ ನಿರಂತರವಾಗಿ ಅರಿವು ಮೂಡಿಸುತ್ತಿದ್ದಾರೆ. ಅಂಗವೈಕಲ್ಯ ಪ್ರಕೃತಿ ನಿಯಮ. ಅದನ್ನು ಮೀರಲು ಯಾರಿಂದಲೂ ಸಾಧ್ಯವಿಲ್ಲ. ಇಂದು ಅಂಗವಿಕಲರು ದೇಶದ ಎಲ್ಲ ಕ್ಷೇತ್ರಗಳಲ್ಲೂ ಮುಂಚೂಣಿಯಲ್ಲಿದ್ದಾರೆ’ ಎಂದರು.

‘ಅಂಗವಿಕಲ ಮಕ್ಕಳು ಜನಿಸಿದರೂ ತಾಯಂದಿರು ಎದೆಗುಂದದೇ ನೋವು, ಅಂತರಾಳದ ಭಾವನೆಗಳನ್ನು ಮೆಟ್ಟಿನಿಲ್ಲುವುದು ಭಾರತೀಯ ಸಂಸ್ಕೃತಿಯಾಗಿದೆ. ಅಂಗವಿಕಲರನ್ನು ಸಮಾಜದ ಸತ್ಪ್ರಜೆಗಳಾಗಿ ರೂಪಿಸುವಲ್ಲಿ ಎಂತಹುದೇ ಸನ್ನಿವೇಶ, ಸಂದರ್ಭ ಎದುರಾದರೂ ಪೋಷಕರು ಧೃತಿಗೆಡಬಾರದು’ ಎಂದರು.

ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಅಂಗವಿಕಲರನ್ನು ಸನ್ಮಾನಿಸಲಾಯಿತು.

ಸನ್ಮಾನ ಮಾಡಲು ತಂದಿದ್ದ ಹಾರ ಶಾಲುಗಳ ಗುಣಮಟ್ಟ ಕಳಪೆಯಾಗಿದ್ದಕ್ಕೆ ಸಚಿವರು ಕಾರ್ಯಕ್ರಮದಲ್ಲೇ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಶಾಸಕ ಸಿ.ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಶಾಸಕರಾದ ಎನ್. ಮಹೇಶ್, ಸಿ.ಎಸ್. ನಿರಂಜನಕುಮಾರ್, ನಗರಸಭೆ ಅಧ್ಯಕ್ಷೆ ಸಿ.ಎಂ. ಆಶಾ, ಜಿಲ್ಲಾಧಿಕಾರಿ ಡಿ.ಎಸ್.ರಮೇಶ್, ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎಂ. ಗಾಯತ್ರಿ, ಎಸ್‌ಪಿ ಟಿ.ಪಿ.ಶಿವಕುಮಾರ್, ಎಎಸ್‌ಪಿ ಕೆ.ಎಸ್.ಸುಂದರ್‌ರಾಜ್, ಡಿವೈಎಸ್‌ಪಿ ಪ್ರಯದರ್ಶಿನಿ ಸಾಣೆಕೊಪ್ಪ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ದೀಪಾ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕಿ ಗೀತಾಲಕ್ಷ್ಮಿ, ಜಿಲ್ಲಾ ಅಂಗವಿಕಲರ ಕ್ಷೇಮಾಭಿವೃದ್ಧಿ ಸಮಿತಿ ಅಧ್ಯಕ್ಷ ರಮೇಶ್ ಇತರರು ಇದ್ದರು.

ವೇದಿಕೆ ಕಾರ್ಯಕ್ರಮಕ್ಕೂ ಮೊದಲು ನಗರದಲ್ಲಿ ಅಂಗವಿಕಲರಿಂದ ಜಾಗೃತಿ ಜಾಥಾ ನಡೆಯಿತು.ಕಾರ್ಯಕ್ರಮದ ಬಳಿಕ ಜಿಲ್ಲಾಮಟ್ಟದ ವಿಕಲಚೇತನರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪ್ರಮಾಣಪತ್ರ ಹಾಗೂ ಬಹುಮಾನ ವಿತರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT