ಯಳಂದೂರು: ತಾಲ್ಲೂಕಿನ ಮಲ್ಲಿಗೆಹಳ್ಳಿ, ಕಟ್ನವಾಡಿ ಹಾಗೂ ಕೆಸ್ತೂರು ಗ್ರಾಮಗಳಲ್ಲಿ ಓಡಾಡುತ್ತಿರುವ ಚಿರತೆ ಶಾಲಾ ಮಕ್ಕಳು ಮತ್ತು ಪೋಷಕರಲ್ಲಿ ಆತಂಕ ಸೃಷ್ಟಿಯಾಗಿದ್ದು, ಅವರಲ್ಲಿನ ಭಯ ನಿವಾರಿಸಲು ಅರಣ್ಯ ಇಲಾಖೆ ಹಾಗೂ ಪೊಲೀಸ್ ಸಿಬ್ಬಂದಿ ಭದ್ರತೆ ನೀಡುವುದರ ಜೊತೆಗೆ ವನ್ಯಜೀವಿಗಳ ಮಹತ್ವ ಮತ್ತು ಸಂರಕ್ಷಣಾ ಕ್ರಮಗಳ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ.
ಮೂರು ದಿನಗಳ ಹಿಂದೆ ಮಲ್ಲಿಗೆಹಳ್ಳಿ ಗ್ರಾಮದಲ್ಲಿ ಬಾಲಕನೊಬ್ಬನ ಮೇಲೆ ಚಿರತೆ ದಾಳಿ ಮಾಡಿತ್ತು.
ಪೋಷಕರು ಶಾಲೆಯ ಸುತ್ತಮುತ್ತ ಚಿರತೆ ಸಂಚರಿಸುತ್ತಿರುವ ಬಗ್ಗೆ ಎಚ್ಚರಿಕೆ ನೀಡಿದ್ದರು. ಇದನ್ನು ಮನಗಂಡ ಇಲಾಖೆಗಳು ಶಾಲೆಗೆ ತೆರಳಿ ವನ್ಯ ಜೀವಿಗಳಿಂದ ರಕ್ಷಣೆ ಪಡೆಯಲು ಅನುಸರಿಸಬೇಕಾದ ತಂತ್ರಗಳನ್ನು ಮಕ್ಕಳಿಗೆ ತಿಳಿಸುತ್ತಿದ್ದಾರೆ. ಚಿರತೆ ಕಾಣಿಸಿಕೊಂಡ ಗ್ರಾಮಗಳಲ್ಲಿ ಗಸ್ತು ಹೆಚ್ಚಿಸಿದ್ದಾರೆ.
ಭಯಭೀತರಾದ ಮಕ್ಕಳನ್ನು ಸ್ವತಃ ಶಾಲೆಗೆ ಕರೆದುಕೊಂಡು ಬರುತ್ತಿದ್ದಾರೆ.