ಚಾಮರಾಜನಗರ: ತಾಲ್ಲೂಕಿನ ಬೆಂಡರವಾಡಿ ಗ್ರಾಮದ ಕೆರೆಗೆ ಬಿದ್ದು ಯುವಕನೊಬ್ಬ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ.
ಗ್ರಾಮಾಂತರ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದು, ಆಕಸ್ಮಿಕವಾಗಿ ಜಾರಿ ಬಿದ್ದಿದ್ದಾನೆಯೇ ಅಥವಾ ಆತ್ಮಹತ್ಯೆಯೇ ಎಂಬುದು ಖಚಿತವಾಗಿಲ್ಲ.
ತಾಲ್ಲೂಕಿನ ನಾಗವಳ್ಳಿ ಗ್ರಾಮದ ವಿಜಯ್ (28) ಮೃತಪಟ್ಟ ಯುವಕ. ಗುರುವಾರ ಸಂಜೆ ಕೆರೆಯಲ್ಲಿ ಶವವೊಂದು ಪತ್ತೆಯಾಗಿತ್ತು. ಅಪರಿಚಿತ ಶವ ಎಂದು ಹೇಳಲಾಗಿತ್ತು. ತಡರಾತ್ರಿ ವಿಷಯ ಕುಟುಂಬಸ್ಥರಿಗೆ ಗೊತ್ತಾಗಿ, ಪರಿಶೀಲನೆ ನಡೆಸಿದಾಗ ಗುರುತು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸುತ್ತೂರು ಜಾತ್ರೆಗೆ ಹೋಗುವುದಾಗಿ ಹೇಳಿ ಬುಧವಾರ ಮನೆಯಿಂದ ತೆರಳಿದ್ದ ಎಂದು ಗೊತ್ತಾಗಿದೆ.
‘ವಿಜಯ್ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಎಂದು ಹೇಳಲಾಗಿದೆ. ಎರಡು ತಿಂಗಳ ಹಿಂದೆ ನಂಜನಗೂಡಿನಲ್ಲಿ ನದಿಗೆ ಹಾರಲು ಹೋಗಿದ್ದ. ಈ ಸಂದರ್ಭದಲ್ಲಿ ಪೊಲೀಸರು ಆತನನ್ನು ರಕ್ಷಿಸಿ ಠಾಣೆಗೆ ಕರೆದುಕೊಂಡು ಬಂದಿದ್ದರು. ಪ್ರಕರಣದ ತನಿಖೆ ನಡೆಸುತ್ತಿದ್ದೇವೆ’ ಎಂದು ಗ್ರಾಮಾಂತರ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಲೋಹಿತ್ ಕುಮಾರ್ ಅವರು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.