ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಯುವನಿಧಿ: ನೋಂದಣಿಗೆ ಡಿ.ಸಿ ಚಾಲನೆ

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಿತ್ತಿಪತ್ರ ಬಿಡುಗಡೆ
Published 27 ಡಿಸೆಂಬರ್ 2023, 7:59 IST
Last Updated 27 ಡಿಸೆಂಬರ್ 2023, 7:59 IST
ಅಕ್ಷರ ಗಾತ್ರ

ಚಾಮರಾಜನಗರ: ಪದವಿ, ಡಿಪ್ಲೊಮಾ ಮುಗಿಸಿ 6 ತಿಂಗಳು ಕಳೆದರೂ ಉದ್ಯೋಗ ಲಭಿಸದೆ ಇರುವವರಿಗೆ ನಿರುದ್ಯೋಗ ಭತ್ಯೆ ನೀಡುವ ರಾಜ್ಯ ಸರ್ಕಾರದ 5ನೇ ಗ್ಯಾರಂಟಿ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆ ಜಿಲ್ಲೆಯಲ್ಲಿ ಮಂಗಳವಾರ (ಡಿ.26) ಆರಂಭಗೊಂಡಿದೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಯುವನಿಧಿ ಯೋಜನೆಯ ಭಿತ್ತಿಪತ್ರ ಬಿಡುಗಡೆ ಮಾಡುವ ಮೂಲಕ ನೋಂದಣಿಗೆ ಚಾಲನೆ ನೀಡಿದರು. 

‘2022-23ನೇ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡಿ 2023ರಲ್ಲಿ ತೇರ್ಗಡೆಯಾಗಿ 6 ತಿಂಗಳು ಆದರೂ ಉದ್ಯೋಗ ಸಿಗದೆ ಇರುವ ಪದವಿ, ಡಿಪ್ಲೊಮಾ ನಿರುದ್ಯೋಗಿಗಳು ಯುವನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆ ಪಡೆಯಬಹುದು. ಪದವೀಧರರಿಗೆ ಮಾಸಿಕ ₹3000, ಡಿಪ್ಲೊಮಾ ತೇರ್ಗಡೆಯಾದವರಿಗೆ ₹1,500 ಭತ್ಯೆ ನೀಡಲಾಗುವುದು’ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ತಿಳಿಸಿದರು. 

ಯೋಜನೆಯಲ್ಲಿ ನೋಂದಾಯಿಸಿದ ನಂತರ ಎರಡು ವರ್ಷದವರೆಗೆ ನಿರುದ್ಯೋಗ ಭತ್ಯೆ ನೀಡಲಾಗುವುದು. ಭತ್ಯೆಯನ್ನು ಡಿಬಿಟಿ ಮುಖಾಂತರ ನೀಡಲಾಗುತ್ತದೆ. ಎರಡು ವರ್ಷದ ಅವಧಿಯೊಳಗೆ ಉದ್ಯೋಗ ದೊರೆತಲ್ಲಿ ಯೋಜನೆಯ ಸೌಲಭ್ಯ ಸ್ಥಗಿತಗೊಳಿಸಲಾಗುತ್ತದೆ.

ಉನ್ನತ ವ್ಯಾಸಂಗಕ್ಕೆ ದಾಖಲಾಗಿರುವವರು, ಶಿಶುಕ್ಷು ವೇತನವನ್ನು ಪಡೆಯುತ್ತಿರುವವರು, ಸರ್ಕಾರಿ, ಖಾಸಗಿ ವಲಯದಲ್ಲಿ ಉದ್ಯೋಗ ಪಡೆಯುವವರು, ರಾಜ್ಯ ಮತ್ತು ಕೇಂದ್ರದ ವಿವಿಧ ಯೋಜನೆಗಳಡಿ ಬ್ಯಾಂಕ್‍ಗಳಲ್ಲಿ ಸಾಲ ಪಡೆದು ಸ್ವಯಂ ಉದ್ಯೋಗ ಮಾಡುವವರು ಯೋಜನೆಗೆ ಅರ್ಹರಿರುವುದಿಲ್ಲ.  

ಸ್ವಯಂ ಉದ್ಯೋಗ ಹೊಂದಿಲ್ಲದವರು, ಉನ್ನತ ವಿದ್ಯಾಭ್ಯಾಸ ಮುಂದುವರಿಸದೆ ಇರುವವರು, ಕರ್ನಾಟಕದಲ್ಲಿ ಕನಿಷ್ಠ 6 ವರ್ಷಗಳ ವಾಸವಿರುವ ಪದವಿ, ಡಿಪ್ಲೊಮಾ ಅಧ್ಯಯನ ಮಾಡಿರುವವರು ಯೋಜನೆಗೆ ಅರ್ಹರಾಗಲಿದ್ದಾರೆ.  ಯೋಜನೆಗೆ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಅರ್ಹ ಪದವೀಧರರು, ಡಿಪ್ಲೊಮಾ ಮಾಡಿದವರು https://sevasindhugs.karnataka.gov.inನಲ್ಲಿ, ಬಾಪೂಜಿ ಸೇವಾಕೇಂದ್ರ, ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ಯಾವುದೇ ಶುಲ್ಕವಿಲ್ಲದೇ ಅರ್ಜಿ ಸಲ್ಲಿಸಬಹುದು. 

ಎಸ್ಎಸ್ಎಲ್‌ಸಿ, ಪಿಯುಸಿ, ಪದವಿ, ಡಿ‌‍ಪ್ಲೊಮಾ ಅಂಕಪಟ್ಟಿ ಪ್ರಮಾಣ ಪತ್ರದೊಂದಿಗೆ ನೊಂದಣಿ ಮಾಡಬೇಕು. ಮಾಹಿತಿಗಾಗಿ ಜಿಲ್ಲಾ ಕೌಶಲಾಭಿವೃದ್ಧಿ ಇಲಾಖೆ ಅಥವಾ ದೂ.ಸಂ 08226-295080 ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ತಿಳಿಸಿದ್ದಾರೆ. 

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಲಕ್ಷ್ಮಿ, ತಹಶೀಲ್ದಾರ್ ಬಸವರಾಜು, ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ, ಜೀವನೋಪಾಯ ಇಲಾಖೆಯ ಅಧಿಕಾರಿ ಮಲ್ಲೇಶ್, ಇತರೆ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT