ಚಾಮರಾಜನಗರ: 2022–23ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮೊದಲ ಪರೀಕ್ಷೆ ಗುರುವಾರ ಜಿಲ್ಲೆಯ 17 ಕೇಂದ್ರಗಳಲ್ಲಿ ಸರಾಗವಾಗಿ ನಡೆದಿದೆ.
ಮೊದಲ ದಿನ ಕನ್ನಡ ಭಾಷಾ ಪರೀಕ್ಷೆ ನಡೆದಿದ್ದು, ಜಿಲ್ಲೆಯಲ್ಲಿ 6,576 ವಿದ್ಯಾರ್ಥಿಗಳು ಹಾಜರಾಗಿದ್ದಾರೆ.
ಕನ್ನಡ ಪರೀಕ್ಷೆಗೆ 6,789 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ 213 ಮಂದಿ ಗೈರಾಗಿದ್ದಾರೆ.
ಕೊಳ್ಳೇಗಾಲ ತಾಲ್ಲೂಕಿನಲ್ಲಿ ಐದು, ಚಾಮರಾಜನಗರದಲ್ಲಿ ನಾಲ್ಕು, ಹನೂರು ಮತ್ತು ಗುಂಡ್ಲುಪೇಟೆಯಲ್ಲಿ ತಲಾ ಮೂರು ಮತ್ತು ಯಳಂದೂರಿನಲ್ಲಿ ಎರಡು ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದೆ.
ಡಿ.ಸಿ ಭೇಟಿ: ಜಿಲ್ಲಾಧಿಕಾರಿ ಡಿ.ಎಸ್.ರಮೇಶ್, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಂಜುನಾಥ ಪ್ರಸನ್ನ ಅವರು ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
‘ಮೊದಲ ಪರೀಕ್ಷೆ ಅತ್ಯಂತ ವ್ಯವಸ್ಥಿತವಾಗಿ ನಡೆದಿದೆ. ಎಲ್ಲೂ ಗೊಂದಲಗಳು ಉಂಟಾಗಿಲ್ಲ. ಕನ್ನಡ ಭಾಷಾ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದವರ ಪೈಕಿ 213 ಮಂದಿ ಪರೀಕ್ಷೆ ಬರೆದಿಲ್ಲ. ಶನಿವಾರ ಎರಡನೇ ಪರೀಕ್ಷೆ (ರಸಾಯನ ವಿಜ್ಞಾನ) ನಡೆಯಲಿದೆ’ ಎಂದು ಡಿಡಿಪಿಯು ಮಂಜುನಾಥ ಪ್ರಸನ್ನ ‘ಪ್ರಜಾವಾಣಿ’ಗೆ ತಿಳಿಸಿದರು.
ಪರೀಕ್ಷೆಯ ಕಾರಣಕ್ಕೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ವಿಧಿಸಲಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಕೂಡ ಮಾಡಲಾಗಿತ್ತು.
ಪರೀಕ್ಷೆ ಬರುವ ವಿದ್ಯಾರ್ಥಿಗಳಿಗೆ ಕೆಎಸ್ಆರ್ಟಿಸಿ ವತಿಯಿಂದ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿತ್ತು.