ಗುಂಡ್ಲುಪೇಟೆ: ತಾಲ್ಲೂಕಿನ ತೆರಕಣಾಂಬಿ ಗ್ರಾಮ ದಲ್ಲಿ ಲಕ್ಷ್ಮಿವರದ ರಾಜಸ್ವಾಮಿ ದಿವ್ಯ ರಥೋತ್ಸವ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.
ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಅಪಾರ ಸಂಖ್ಯೆಯ ಭಕ್ತರು ದೇವರ ದರ್ಶನ ಪಡೆದರು. 60 ವರ್ಷಗಳಿಂದ ರಥೋತ್ಸವ ನಡೆದಿರಲಿಲ್ಲ. ಕಳೆದ ವರ್ಷ ಸುಮಾರು 15 ಲಕ್ಷ ರೂಪಾಯಿ ವೆಚ್ಚದಲ್ಲಿ ನೂತನವಾಗಿ ರಥವನ್ನು ನಿರ್ಮಿಸಿ ಮತ್ತೆ ರಥೋತ್ಸವಕ್ಕೆ ಚಾಲನೆ ನೀಡಲಾಗಿತ್ತು. ಈ ವರ್ಷ ವಿವಿಧ ಭಾಗಗಳಿಂದ ಅನೇಕ ಭಕ್ತರು ಆಗಮಿಸಿದ್ದರು. ಹಲವರು ರಥಕ್ಕೆ ಹಣ್ಣು ಮತ್ತು ಧವನ ಎಸೆಯುವುದರ ಮೂಲಕ ತಮ್ಮ ಹರಿಕೆ ತೀರಿಸಿಕೊಂಡರು.
ರಥೋತ್ಸವದ ಹಿನ್ನೆಲೆಯಲ್ಲಿ ದೇವಾಲಯವನ್ನು ತಳಿರು, ತೋರಣ ಹಾಗೂ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.
ತಹಶೀಲ್ದಾರ್ ಜಿ.ಎನ್. ಮಂಜುನಾಥ್, ಜಿಲ್ಲಾ ಪಂಚಾಯಿತಿ ಸದಸ್ಯ ಟಿ.ಪಿ. ಮಹದೇವಪ್ಪ, ತಾಲ್ಲೂಕು ಪಂಚಾಯಿತಿ ಸದಸ್ಯೆ ಪ್ರೇಮ, ತೆರಕಣಾಂಬಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಟಿ.ಆರ್. ರಾಜೇಶ್ ಭಾಗವಹಿಸಿದ್ದರು.