ಚಾಮರಾಜನಗರ: ‘ಕಾಡಂಚಿನ ಗ್ರಾಮದ ಸರ್ಕಾರಿ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸಿ ಅಲ್ಲಿನ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವಂತಹ ಉತ್ತಮ ಶಿಕ್ಷಕರಿಗೆ ಗೌರವ ಪ್ರಶಸ್ತಿ ನೀಡುತ್ತಿರುವುದು ಶ್ಲಾಘನೀಯ’ ಎಂದು ಜಿಲ್ಲಾ ಪಂಚಾಯಿತಿ ಸದಸ್ಯೆ ನಿತ್ಯಾ ಪ್ರವೀಣ್ ಹೇಳಿದರು.
ತಾಲ್ಲೂಕಿನ ಅಯ್ಯನಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡುತ್ತಾ ಬಂದಿರುವ ಮುಖ್ಯ ಶಿಕ್ಷಕ ರಾಜೇಂದ್ರ ಅವರಿಗೆ ‘ಶಿಕ್ಷಣ ರತ್ನ ಪ್ರಶಸ್ತಿ’ ದೊರೆತಿರುವುದು ಸಂತಸವಾಗಿದೆ. ಶಿಕ್ಷಕರು ಕೇವಲ ಪಾಠ ಪ್ರವಚನಕ್ಕೆ ಸೀಮಿತವಾಗದೆ ಮಕ್ಕಳ ಪ್ರತಿಭೆಗಳನ್ನು ಗುರುತಿಸಬೇಕು ಎಂದರು.
ಶಿಕ್ಷಣದಿಂದ ವಂಚಿತರಾಗಿರುವ ಮಕ್ಕಳನ್ನು ಪುನ: ಶಾಲೆಗೆ ಕರೆತರುವುದು, ಸರ್ಕಾರದ ಸವಲತ್ತುಗಳನ್ನು ಸಮರ್ಪಕವಾಗಿ ವಿದ್ಯಾರ್ಥಿಗಳಿಗೆ ತಲುಪಿಸಿ ಅವರ ಅಭಿವೃದ್ಧಿಗೆ ಕಾರಣರಾಗಬೇಕು. ಇಂತಹ ಎಲ್ಲಾ ಕಾರ್ಯಗಳನ್ನು ಸಮರ್ಪಕವಾಗಿ ನಿರ್ವಹಿಸಿ ವಿದ್ಯಾರ್ಥಿಗಳ ಹಾಗೂ ಪೋಷಕರ ಪ್ರಶಂಸೆಗೆ ಕಾರಣರಾಗಿರುವ ಮುಖ್ಯ ಶಿಕ್ಷಕ ರಾಜೇಂದ್ರ ಅವರಿಗೆ ಶಿಕ್ಷಣ ರತ್ನ ಪ್ರಶಸ್ತಿ ದೊರೆತಿರುವುದು ಇತರ ಶಿಕ್ಷಕರಿಗೂ ಮಾದರಿಯಾಗಲಿದೆ ಎಂದರು.
ಎಸ್ಡಿಎಂಸಿ ಅಧ್ಯಕ್ಷ ಸೋಮಶೇಖರ್, ಗ್ರಾ.ಪಂ. ಸದಸ್ಯರಾದ ರವಿ, ವಿಜೇಂದ್ರಸ್ವಾಮಿ, ಗೋವಿಂದರಾಜು, ಜಯಮ್ಮ ನಿಂಗಯ್ಯ ಹಾಜರಿದ್ದರು.