ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಎ.ಎಂ. ಗುಡಿ ವಲಯದ ಐನೂರು ಮಾರಿಗುಡಿ ಜಾತ್ರೆಗೆ ನಿಗದಿಪಡಿಸಿರುವ ಷರತ್ತುಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಬುಧವಾರ ಸೂಚಿಸಿದ್ದಾರೆ.
ಪಟ್ಟಣದಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜಾತ್ರೋತ್ಸವ ಸಂಬಂಧ ಅಧಿಕಾರಿಗಳು ಹಾಗೂ ಜಾತ್ರೆ ಆಚರಿಸುವ ಸಮುದಾಯ ಪ್ರತಿನಿಧಿಗಳೊಂದಿಗೆ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಈ ಸೂಚನೆ ನೀಡಿದ್ದಾರೆ. ಜಾತ್ರಾ ಮಹೋತ್ಸವವನ್ನು ಹಲವು ನಿಬಂಧನೆಗೆ ಒಳಪಟ್ಟು ಜುಲೈ 9ರಂದು ಮಾತ್ರ ಆಚರಿಸಲು ಅವಕಾಶ ಕಲ್ಪಿಸಲಾಗಿದೆ. ಅರಣ್ಯ ಗಡಿಯಲ್ಲಿ ಬೆಳಿಗ್ಗೆ 7ರಿಂದ ಸಂಜೆ 5 ಗಂಟೆಯವರೆಗೆ ಮಾತ್ರ ಸಂಚರಿಸಲು ಕಾಲಾವಕಾಶ ಸೀಮಿತಗೊಳಿಸಲಾಗಿದೆ. ದೇವಾಲಯ ಹಾಗೂ ಸುತ್ತಮುತ್ತಲಿನ ಪ್ರದೇಶವು ಹುಲಿ ಸಂರಕ್ಷಿತ ಪ್ರದೇಶವಾಗಿರುವುದರಿಂದ ನೀತಿ ನಿಯಮಗಳನ್ನು ಪಾಲನೆ ಮಾಡಬೇಕು ಎಂದರು.
ಮರ ಕಡಿಯುವುದು, ವನ್ಯಜೀವಿಗಳಿಗೆ ತೊಂದರೆ ಕೊಡುವುದು ಅಪರಾಧವಾಗಲಿದೆ. ಸರ್ಕಾರಿ ಆಸ್ತಿಗೆ ಹಾನಿ ಹಾಗೂ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದಲ್ಲಿ ಕಾನೂನು ಕ್ರಮ ಜರುಗಿಸಲಾಗುತ್ತದೆ. ದೇವಾಲಯದ ಸುತ್ತಲೂ ಶುದ್ಧತೆ ಕಾಪಾಡಬೇಕು ಎಂದು ಜಿಲ್ಲಾಧಿಕಾರಿ ಸಭೆಯಲ್ಲಿ ವಿವರಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೆಂಧರ್ ಕುಮಾರ್ ಮೀನಾ, ಬಂಡೀಪುರ ಹುಲಿ ಸಂರಕ್ಷಿತ ಪ್ರದೆಶದ ನಿರ್ದೇಶಕರಾದ ಅಂಬಾಡಿ ಮಾಧವ್, ಸಹಾಯಕ ಅರಣ್ಯ ಸಂರಕ್ಷಣಾಧಿಕರಿ ಪರಮೇಶ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಮುನಿರಾಜಪ್ಪ ಹಾಗೂ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.