ಶಿಡ್ಲಘಟ್ಟ: ಅರ್ಹ ವಯಸ್ಸಿನ ಎಲ್ಲಾ ಮಕ್ಕಳಲ್ಲಿಯೂ ಅಪೌಷ್ಟಿಕತೆ ಹೋಗಲಾಡಿಸಿ ದೈಹಿಕವಾಗಿ ಸದೃಢಗೊಳಿಸುವುದಲ್ಲದೇ ಮಾನಸಿಕವಾಗಿ ಮಕ್ಕಳನ್ನು ಸಬಲಗೊಳಿಸುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾ ಅಕ್ಷರ ದಾಸೋಹ ಶಿಕ್ಷಣಾಧಿಕಾರಿ ಶೈಲಜಾ ತಿಳಿಸಿದರು.
ತಾಲ್ಲೂಕಿನ ಸುಗಟೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಅಕ್ಷರ ದಾಸೋಹ ಯೋಜನೆಯಿಂದ ಗುರುವಾರ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾಮಟ್ಟದ ಮಧ್ಯಾಹ್ನದ ಬಿಸಿಯೂಟ ಅಕ್ಷರದಾಸೋಹ ಪುನರಾರಂಭೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಚಂದ್ರಕಾಂತ್ ಮಾತನಾಡಿ, ಮಧ್ಯಾಹ್ನದ ಬಿಸಿಯೂಟ ಯೋಜನೆಯಿಂದಾಗಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ, ಹಾಜರಾತಿ ಗಣನೀಯವಾಗಿ ಹೆಚ್ಚಿದೆ. ಕೊರೊನಾ ಹಾವಳಿಯಿಂದ ಸ್ಥಗಿತಗೊಂಡಿದ್ದ ಬಿಸಿಯೂಟ ಯೋಜನೆ ಪ್ರಾರಂಭವಾಗಿದ್ದು, ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸೂಚಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಆಂಜನೇಯ, ಶಿಕ್ಷಕ ಎಚ್.ಎಸ್. ರುದ್ರೇಶಮೂರ್ತಿ ಮಾತನಾಡಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಾಂತಮ್ಮ ದೇವರಾಜು, ಸದಸ್ಯ ಸತೀಶ್ಕುಮಾರ್, ಶಿವಶಂಕರಪ್ಪ, ಎಂ. ನಾಗರಾಜು, ಅಭಿವೃದ್ಧಿ ಅಧಿಕಾರಿ ಕೃಷ್ಣಪ್ಪ, ಮಾಜಿ ಸದಸ್ಯ ಎನ್. ಅಶ್ವತ್ಥಪ್ಪ, ದೇವರಾಜು, ಎಸ್ಡಿಎಂಸಿ ಅಧ್ಯಕ್ಷ ಜಗದೀಶ್, ನಾರಾಯಣಸ್ವಾಮಿ, ಸದಸ್ಯೆ ಪುಷ್ಪಲತಾ, ದೊಡ್ಡ ಮುನಿವೆಂಕಟಶೆಟ್ಟಿ ಹಾಜರಿದ್ದರು.