ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೌಲಭ್ಯ ಕಲ್ಪಿಸಲು ಅದಾಲತ್‌ ಸಹಕಾರಿ: ಎಂ.ಬಿ. ಚಿಕ್ಕನರಸಿಂಹಯ್ಯ

ಮಂಡಿಕಲ್ಲು ಹೋಬಳಿಯಲ್ಲಿ ‘ಜಿಲ್ಲಾಡಳಿತದ ನಡೆ ಗ್ರಾಮಗಳ ಕಡೆ’ಗೆ ಚಾಲನೆ
Last Updated 29 ನವೆಂಬರ್ 2020, 2:12 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ಸರ್ಕಾರ ಜಾರಿಗೊಳಿಸಿರುವ ವಿವಿಧ ಯೋಜನೆಗಳ ಸೌಲಭ್ಯ ಪಡೆದುಕೊಳ್ಳಲು ನಾಗರಿಕರು ಇಲಾಖೆಗಳಿಗೆ ಅಲೆದಾಡುವುದನ್ನು ತಪ್ಪಿಸಲು ಹೋಬಳಿಮಟ್ಟದ ಅದಾಲತ್ ಹಮ್ಮಿಕೊಳ್ಳಲಾಗಿದೆ. ಪ್ರತಿಯೊಬ್ಬ ಅರ್ಹ ಫಲಾನುಭವಿ ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಂ.ಬಿ. ಚಿಕ್ಕನರಸಿಂಹಯ್ಯ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಆಡಳಿತದಿಂದ ಮಂಡಿಕಲ್ಲು ಪ್ರೌಢಶಾಲಾ ಆವರಣದಲ್ಲಿ ಶನಿವಾರ ಹಮ್ಮಿಕೊಂಡಿದ್ದವಿವಿಧ ಇಲಾಖೆಗಳ ಸೇವೆಗಳನ್ನು ಒದಗಿಸಲು ಹೋಬಳಿ ಮಟ್ಟದ ‘ಜಿಲ್ಲಾಡಳಿತದ ನಡೆ ಗ್ರಾಮಗಳ ಕಡೆ’ ಅದಾಲತ್‌ನಲ್ಲಿ ಅವರು ಮಾತನಾಡಿದರು.

‘ಸಾರ್ವಜನಿಕರಿಗೆ ನೇರವಾಗಿ ಸವಲತ್ತು ತಲುಪಿಸಲು ಈ ಅದಾಲತ್ ಹಮ್ಮಿಕೊಂಡಿದೆ. ಈ ಕಾರ್ಯಕ್ರಮ ಯಶಸ್ವಿಯಾಗಬೇಕಾದರೆ, ಜನಸಾಮಾನ್ಯರ ಸಹಕಾರ ಅತ್ಯಗತ್ಯ’ ಎಂದು ತಿಳಿಸಿದರು.

‘ಅರ್ಹ ಫಲಾನುಭವಿಗೆ ಕೇವಲ 20 ದಿನಗಳಲ್ಲಿ ಸೇವೆ ಸಿಗುವಂತೆ ಮಾಡುವುದು ಹಾಗೂ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶ. ಅಧಿಕಾರಿಗಳು ತಮ್ಮ ಇಲಾಖೆ ಅಡಿ ಇರುವ ಸೌಲಭ್ಯಗಳ ಮಾಹಿತಿಯೊಂದಿಗೆ ಮನೆ ಬಾಗಿಲಿಗೆ ಬಂದಾಗ ನಾಗರಿಕರು ಉತ್ತಮವಾಗಿ ಸ್ಪಂದಿಸಬೇಕು’ ಎಂದರು.

ಜಿಲ್ಲಾಧಿಕಾರಿ ಆರ್. ಲತಾ ಮಾತನಾಡಿ, ‘ಇದೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ಜಿಲ್ಲಾಡಳಿತದ ನಡೆ ಗ್ರಾಮಗಳ ಕಡೆ ಎಂಬ ಶೀರ್ಷಿಕೆಯಡಿ ವಿವಿಧ ಇಲಾಖೆಗಳ ಸೇವೆಗಳನ್ನು ಒದಗಿಸಲು ಅದಾಲತ್ ಹಮ್ಮಿಕೊಳ್ಳಲಾಗಿದೆ. 22 ದಿನಗಳ ಕಾಲ ಮಂಡಿಕಲ್ಲು ಹೋಬಳಿಯಲ್ಲಿ ಅದಾಲತ್ ನಡೆಯಲಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಯಾದ್ಯಂತ ವಿಸ್ತರಿಸುವ ಚಿಂತನೆ ಇದೆ’ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪಿ. ಶಿವಶಂಕರ್ ಮಾತನಾಡಿ, ‘ಗ್ರಾಮೀಣ ಪ್ರದೇಶದ ಸರ್ವತೋಮುಖ ಅಭಿವೃದ್ಧಿಗೆ ಜಿಲ್ಲಾ ಪಂಚಾಯಿತಿ ಬದ್ಧವಾಗಿದೆ. ಗ್ರಾಮೀಣ ಜನರಿಗೆ ಹೆಚ್ಚಿನ ಸೌಲಭ್ಯ ಒದಗಿಸುವಂತಹ ಇಲಾಖೆಗಳು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುತ್ತವೆ’ ಎಂದರು.

ಜಿಲ್ಲಾ ಪಂಚಾಯಿತಿ ಸದಸ್ಯ ಪಿ.ಎನ್. ಕೇಶವರೆಡ್ಡಿ ಮಾತನಾಡಿ, ‘ರೈತರು ಒಂದೇ ಬೆಳೆಗೆ ಒತ್ತು ನೀಡದೆ, ವಿವಿಧ ಬೆಳೆಗಳನ್ನು ಬೆಳೆಯಬೇಕು’ ಎಂದು ಹೇಳಿದರು.

ಫಲಾನುಭವಿಗಳಿಗೆ ಉದ್ಯೋಗ ಚೀಟಿ, ವಿಧವಾ ವೇತನ ಆದೇಶ, ಮಂಜೂರಾತಿ ಪತ್ರಗಳನ್ನು ವಿತರಿಸಲಾಯಿತು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್, ಉಪ ವಿಭಾಗಾಧಿಕಾರಿ ಎ.ಎನ್. ರಘುನಂದನ್, ಜಿಲ್ಲಾ ಪಂಚಾಯಿತಿಯ ಉಪ ಕಾರ್ಯದರ್ಶಿ ನೋಮೇಶ್, ತಹಶೀಲ್ದಾರ್‌ಗಳಾದ ನಾಗಪ್ರಶಾಂತ್, ರವಿ, ಜಿಲ್ಲಾ ಆರೋಗ್ಯಾಧಿಕಾರಿ ಇಂದಿರಾ ಕಬಾಡೆ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT