ಬಾಗೇಪಲ್ಲಿ: ತಾಲ್ಲೂಕು ಕಾನೂನು ಸೇವಾ ಸಮಿತಿಯಿಂದ ಮಾರ್ಚ್ 12ರಂದು ಪಟ್ಟಣದ ಸಿವಿಲ್ ನ್ಯಾಯಾಲಯದ ಆವರಣದಲ್ಲಿ ಬೃಹತ್ ಲೋಕ ಅದಾಲತ್ ಹಮ್ಮಿಕೊಂಡಿದ್ದು, ಕಕ್ಷಿದಾರರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಿವಿಲ್ ನ್ಯಾಯಾಧೀಶ ಎಸ್.ಎಂ. ಅರುಟಗಿ ಹೇಳಿದರು.
ಪಟ್ಟಣದ ಸಿವಿಲ್ ನ್ಯಾಯಾಲಯ ಆವರಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಮೆಗಾ ಲೋಕ ಅದಾಲತ್ನ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಹೈಕೋರ್ಟ್ ಆದೇಶದಂತೆ ತಾಲ್ಲೂಕುವಾರು ಲೋಕ ಅದಾಲತ್ ಆಯೋಜಿಸಲಾಗಿದೆ. ಇದು ಅನೇಕ ಕಕ್ಷಿದಾರರಿಗೆ ವರದಾನವಾಗಿದೆ. ವಿನಾಕಾರಣ ಸಣ್ಣಪುಟ್ಟ ಪ್ರಕರಣಗಳ ಬಗ್ಗೆ ನ್ಯಾಯಾಲಯದಲ್ಲಿ ದಾವೆ ಹೂಡಿ ಅಲೆದಾಡುತ್ತಿದ್ದಾರೆ. ಅದಾಲತ್ನಿಂದ ಕಕ್ಷಿದಾರರ ಅಮೂಲ್ಯವಾದ ಸಮಯ ಉಳಿಯುತ್ತದೆ. ಹಣ ಉಳಿಸುವ ಸಲುವಾಗಿ ಈ ಅದಾಲತ್ ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.
ಕೌಟುಂಬಿಕ ವ್ಯಾಜ್ಯ, ಸಿವಿಲ್, ಹಣಕಾಸಿನ ವಿಚಾರ, ಬ್ಯಾಂಕ್ನಲ್ಲಿ ಸಾಲ ಪಡೆದಿರುವ ಪ್ರಕರಣ ಸೇರಿದಂತೆ ಅನೇಕ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಬಹುದು. ನ್ಯಾಯಾಲಯದಲ್ಲಿ ರಾಜೀ ಮಾಡಿ ಕೊಂಡರೆ ಮಾನವ ಸಂಬಂಧ, ಮೌಲ್ಯ ಗಳು, ಶಾಂತಿ, ನೆಮ್ಮದಿಯ ವಾತಾವರಣ ಮೂಡಲಿದೆ ಎಂದು ಹೇಳಿದರು.
ಸಹಾಯಕ ಸರ್ಕಾರಿ ಅಭಿಯೋಜಕ ಚಿನ್ನಸ್ವಾಮಿ, ವಕೀಲರ ಸಂಘದ ತಾಲ್ಲೂಕು ಅಧ್ಯಕ್ಷ ಮುಸ್ತಾಕ್ ಅಹಮದ್, ಹಿರಿಯ ವಕೀಲರಾದ ಅಪ್ಪಸ್ವಾಮಿ, ಎ.ಜಿ. ಸುಧಾಕರ್, ನಾರಾಯಣ, ಎ. ನಂಜುಂಡಪ್ಪ, ನಾಗಭೂಷಣ್ ನಾಯಕ್, ಬಾಲುನಾಯಕ್, ಸರ್ಕಲ್ ಇನ್ಸ್ಪೆಕ್ಟರ್ಗಳಾದ ಡಿ.ಆರ್. ನಾಗರಾಜ್, ಜಿ.ಪಿ. ರಾಜು ಹಾಜರಿದ್ದರು.