ಶಿಡ್ಲಘಟ್ಟ: ವಿದೇಶಗಳಿಂದ ಆಹಾರ ಧಾನ್ಯಗಳನ್ನು ರಫ್ತು ಮಾಡಿಕೊಳ್ಳುತ್ತಿದ್ದಂತಹ ಸಂದರ್ಭದಲ್ಲಿ ದೇಶದಲ್ಲಿ ಹಸಿರುಕ್ರಾಂತಿಯನ್ನು ಹುಟ್ಟುಹಾಕಿದ ಡಾ.ಬಾಬು ಜಗಜೀವನ ರಾಂ ಅವರ ದೂರದೃಷ್ಟಿಯಿಂದ ದೇಶದ ಎಲ್ಲಾ ವರ್ಗದ ಜನರು ನೆಮ್ಮದಿಯ ಜೀವನ ನಡೆಸುವಂತಾಗಿದೆ ಎಂದು ಶಾಸಕ ವಿ. ಮುನಿಯಪ್ಪ ಹೇಳಿದರು.
ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಡಾ.ಬಾಬು ಜಗಜೀವನ ರಾಂ ಜಯಂತಿಯಲ್ಲಿ ಮಾತನಾಡಿದರು.
ಎನ್.ಎಸ್.ಯು.ಐ ರಾಜ್ಯ ಸಂಚಾಲಕ ಮುನೀಂದ್ರ ಮಾತನಾಡಿ, ‘ಮಹನೀಯರ ಜಯಂತ್ಯುತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಸರ್ಕಾರ ₹ 25 ಸಾವಿರ ನೀಡುತ್ತಿದೆ. ಆದರೆ, ತಾಲ್ಲೂಕು ಆಡಳಿತ ಕನಿಷ್ಠ ಬ್ಯಾನರ್ ಕೂಡ ಮಾಡಿಸದೆ ಕಾಟಾಚಾರಕ್ಕೆ ಜಯಂತ್ಯುತ್ಸವವನ್ನು ಆಚರಿಸುತ್ತಿದೆ’ ಎಂದರು.
ತಹಶೀಲ್ದಾರ್ ಬಿ.ಎಸ್. ರಾಜೀವ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಜಗದೀಶ್, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀನಿವಾಸ್, ಕೆ.ಎನ್. ಸುಬ್ಬಾರೆಡ್ಡಿ ಹಾಜರಿದ್ದರು.