ಗೌರಿಬಿದನೂರು: ‘ಭಾರತ ಶತಮಾನಗಳಿಂದಲೂ ಕೃಷಿ ಪ್ರಧಾನವಾಗಿದೆ. ಇಲ್ಲಿನ ರೈತರು ಕೃಷಿ ಕ್ಷೇತ್ರವನ್ನು ನಂಬಿ ಬದುಕು ಸಾಗಿಸುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಅವೈಜ್ಞಾನಿಕ ಕೃಷಿ ನೀತಿಗಳಿಂದ ರೈತರು ಸಂಕಷ್ಟಕ್ಕೆ ಈಡಾಗುವ ಪರಿಸ್ಥಿತಿ ಬಂದೊದಗಿದೆ’ ಎಂದು ರಾಜ್ಯ ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಜಿ.ಎ. ಲೋಕೇಶ್ ಗೌಡ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಎಂ.ಜಿ. ವೃತ್ತದಲ್ಲಿ ಭಾರತ್ ಬಂದ್ಗೆ ಕರೆ ನೀಡಿದ್ದ ರಾಷ್ಟ್ರೀಯ ರೈತ ಸಂಘಕ್ಕೆ ಬೆಂಬಲ ವ್ಯಕ್ತಪಡಿಸಿರುವ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ರೈತರು ನಡೆಸಿದ ಪ್ರತಿಭಟನೆಯ ನೇತೃತ್ವವಹಿಸಿ ಅವರು ಮಾತನಾಡಿದರು.
ಕಳೆದ ಮೂರು ತಿಂಗಳಿಂದ ಕೇಂದ್ರ ಸರ್ಕಾರ ಜಾರಿಗೆ ತಂದ ಮೂರು ಕೃಷಿ ಕಾಯ್ದೆಗಳ ವಿರುದ್ಧ ದೆಹಲಿಯಲ್ಲಿ ರೈತರು ಪ್ರತಿಭಟನೆ ನಡೆಸಿ ವಿರೋಧ ವ್ಯಕ್ತಪಡಿಸುತ್ತಿದ್ದರೂ ಪ್ರಧಾನಿ ನರೇಂದ್ರ ಮೋದಿ ಕಿಂಚತ್ತೂ ಕನಿಕರ ತೋರಿಲ್ಲ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ತರುವಂತಾಗಿದೆ. ದೇಶದಲ್ಲಿ ಬ್ರಿಟಿಷ್ ಆಳ್ವಿಕೆ ಇದೆಯೋ ಅಥವಾ ಪ್ರಜಾಪ್ರಭುತ್ವದ ವ್ಯವಸ್ಥೆ ಇದೆಯೋ ಎಂಬ ಅನುಮಾನ ಮೂಡುವಂತಾಗಿದೆ ಎಂದು ಪ್ರಶ್ನೆ ಮಾಡಿದರು.
ಹಸಿರು ಸೇನೆಯ ಗೌರವಾಧ್ಯಕ್ಷ ಮುದ್ದುರಂಗಪ್ಪ, ರೈತ ಸಂಘದ ಕಾರ್ಯದರ್ಶಿ ಸನತ್ ಕುಮಾರ್, ರಾಜಣ್ಣ, ಶ್ರೀನಿವಾಸ್, ಆದಿ ನಾರಾಯ ಣಪ್ಪ, ಸೈಯದ್ ಪಾಷಾ, ಸುಭಾನ್, ನಂಜರೆಡ್ಡಿ, ರಾಮಚಂದ್ರರೆಡ್ಡಿ, ಸುರೇಶ್, ಅಶ್ವತ್ಥಪ್ಪ ಭಾಗವಹಿಸಿದ್ದರು.