ಅಪ್ಪೇಗೌಡನಹಳ್ಳಿಯಲ್ಲಿ ‘ಉಳುಮೆ ಉತ್ಸವ’

ಶಿಡ್ಲಘಟ್ಟ: ‘ರೈತರಿಂದ ಕಲಿಯುವುದು ಮತ್ತು ರೈತರಿಗೆ ಕಲಿಸುವುದು’ ಎಂಬ ಉದ್ದೇಶದಿಂದ ಗ್ರಾಮೀಣ ಜಾಗೃತಿಯ ಕಾರ್ಯಾನುಭವದಲ್ಲಿ ಮೂರು ತಿಂಗಳು ಹಳ್ಳಿಯಲ್ಲಿ ವಾಸಿಸಿದ ವಿದ್ಯಾರ್ಥಿಗಳು ಅಪ್ಪೇಗೌಡನಹಳ್ಳಿಯ ಮನೆಮಕ್ಕಳಾಗಿದ್ದಾರೆ ಎಂದು ಕರ್ನಾಟಕ ರಾಜ್ಯ ಯೋಜನಾ ಮಂಡಳಿ ಸದಸ್ಯ ಕೆ.ಅಮರನಾರಾಯಣ ಹೇಳಿದರು.
ಅಪ್ಪೇಗೌಡನಹಳ್ಳಿಯ ಸರ್ಕಾರಿ ಶಾಲೆಯಲ್ಲಿ ಸೋಮವಾರ ಅಂತಿಮ ವರ್ಷದ ಕೃಷಿ ಪದವಿ ವಿದ್ಯಾರ್ಥಿಗಳ ತೊಂಬತ್ತು ದಿನಗಳ ಗ್ರಾಮೀಣ ಕಾರ್ಯಾನುಭವದ ಕೊನೆಯ ದಿನದ ಕೃಷಿ ವಸ್ತು ಪ್ರದರ್ಶನ ಮತ್ತು ವಿಚಾರಗೋಷ್ಠಿಯ ‘ಉಳುಮೆ ಉತ್ಸವ’ ಕಾರ್ಯಕ್ರಮದಲ್ಲಿ ಮಾತನಾಡಿದರು.
ನಾಲ್ಕು ಗೋಡೆಯ ಮಧ್ಯೆ ಕಲಿಯುವ ಕಲಿಕೆಯ ಜತೆಗೆ ರೈತರೊಂದಿಗೆ ಒಡನಾಡಿ ಕಲಿಯುವ ಕಲಿಕೆ ವಿದ್ಯಾರ್ಥಿಗಳ ಬದುಕಿಗೆ ಮೂಲ ದ್ರವ್ಯ ಒದಗಿಸುತ್ತದೆ. ರೈತರೊಂದಿಗೆ ವಿದ್ಯಾರ್ಥಿಗಳು ಬೆರೆಯಬೇಕು, ಅವರ ಸಮಸ್ಯೆ ಆಲಿಸಬೇಕು. ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಬೇಕು ಎಂದರು.
ವಿದ್ಯಾರ್ಥಿಗಳ ಕಾರ್ಯಚಟುವಟಿಕೆಯ ಮಾಹಿತಿಯುಳ್ಳ ಪುಸ್ತಕ ಬಿಡುಗಡೆ ಮಾಡಿದ ಮೇಜರ್ ಸುನಿಲ್ ಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ತೊಂಬತ್ತು ದಿನಗಳ ಗ್ರಾಮ ಜೀವನದಲ್ಲಿ ವಿಭಿನ್ನ ರೀತಿಯ ಕಾರ್ಯಕ್ರಮ ನಡೆಸಿದ್ದಾರೆ. ವಿದ್ಯಾರ್ಥಿಗಳು ಕೇವಲ ಕೃಷಿಯ ಬಗ್ಗೆ ಕಲಿತರೆ ಸಾಲದು. ಗ್ರಾಮೀಣ ಜನರ ಅಂತಃಕರಣ, ಸಹಾಯ ಮಾಡುವ ಗುಣವನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ರೇಷ್ಮೆ, ಕೃಷಿ, ತೋಟಗಾರಿಕೆ ಮತ್ತು ಪಶುಸಂಗೋಪನಾ ಇಲಾಖೆಯಿಂದ ಮಳಿಗೆಗಳನ್ನು ಹಾಕಲಾಗಿತ್ತು. ಆರೋಗ್ಯ ಇಲಾಖೆಯಿಂದ ಮಧುಮೇಹ ಪರೀಕ್ಷೆ ನಡೆಸಿದ್ದಲ್ಲದೆ, ಕೊರೊನಾ ಲಸಿಕೆ ಹಾಕಲಾಯಿತು.
ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಬಿ.ಶಿವಕುಮಾರ್, ಕೃಷಿ ವಿಶ್ವವಿದ್ಯಾಲಯದ ಕೃಷಿ ವಿಸ್ತರಣಾ ವಿಭಾಗದ ಪ್ರಾಧ್ಯಾಪಕ ಡಾ.ವೈ.ಎನ್.ಶಿವಲಿಂಗಯ್ಯ, ಡಾ.ಎಸ್.ವಿ.ಸುರೇಶ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಮುನಿರೆಡ್ಡಿ, ಕ್ಷೇತ್ರಾಧಿಕಾರಿ ಚೇತನ್, ಪ್ರಾಧ್ಯಾಪಕಿ ಡಾ.ಎ.ವಿದ್ಯಾ, ಡಾ.ಬಿ.ಎಸ್.ಚೇತನಾ, ಎನ್.ಗೋಪಾಲ್, ಕೆ.ತಿಮ್ಮರಾಜು, ಪಶುವೈದ್ಯಾಧಿಕಾರಿ ಡಾ.ಬಿ.ಕೆ.ರಮೇಶ್, ಬಿ.ವಿ.ಮಹೇಶ್, ಡಾ.ಎಂ.ಬೈರೇಗೌಡ, ಕೆ.ಲಕ್ಷ್ಮಿನಾರಾಯಣರೆಡ್ಡಿ, ಪ್ರವೀಣ್ ಕುಮಾರ್, ಎ.ಎಂ.ತ್ಯಾಗರಾಜ್, ಗಂಗರತ್ನ ಮುನೀಂದ್ರ, ದ್ಯಾವಪ್ಪ, ಮಂಜುಳಮ್ಮ, ಮುನಿವೆಂಕಟಸ್ವಾಮಿ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.