ಚಿಕ್ಕಬಳ್ಳಾಪುರ: ಬಾಗೇಪಲ್ಲಿ ತಾಲ್ಲೂಕಿನ ಯಗವಮದ್ದಲಖಾನೆಯಲ್ಲಿ ಶನಿವಾರ ಮಧ್ಯಾಹ್ನ ಕೊಲೆ ಆರೋಪಿ ವೆಂಕಟೇಶ್ ಅವರ ಮನೆ ಮೇಲೆ ದಾಳಿ ನಡೆಸಿ, ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 26 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದು, 12 ಮಂದಿಯನ್ನು ಬಂಧಿಸಿದ್ದಾರೆ.
ವೆಂಕಟೇಶ್ ಅವರು ತಮ್ಮ ಪುತ್ರಿಯ ಆತ್ಮಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳುವ ಉದ್ದೇಶದಿಂದ ಶುಕ್ರವಾರ ರಾತ್ರಿ ತಮ್ಮದೇ ಗ್ರಾಮದ ಹರೀಶ್ ಎಂಬ ಯುವಕನನ್ನು ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದರು.
ಕೊಲೆಯಾದ ಯುವಕನ ಸಂಬಂಧಿಕರು ರೊಚ್ಚಿಗೆದ್ದು ಶನಿವಾರ ಮಧ್ಯಾಹ್ನ ಆರೋಪಿಯ ಮನೆ ಮೇಲೆ ದಾಳಿ ನಡೆಸಿ, ಬೆಂಕಿ ಹಚ್ಚಿದ್ದರು. ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದರು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಅಧಿಕಾರಿಗಳು ಪ್ರಮುಖ ಆರೋಪಿಗಳಾದ ರಮೇಶ್, ಗಂಗುಲಪ್ಪ, ಶಂಕರ್, ರಂಗಮ್ಮ ಸೇರಿದಂತೆ ಒಟ್ಟು 26 ಜನರ ವಿರುದ್ಧ ಎಫ್ಐಆರ್ ದಾಖಲಿಸಿದ್ದು, ಘಟನೆಯಲ್ಲಿ ಸುಮಾರು ₹25 ಲಕ್ಷದಷ್ಟು ಹಾನಿಯಾಗಿದೆ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.