ಚಿಕ್ಕಬಳ್ಳಾಪುರ: ‘ಕೇಂದ್ರ ಜಲ ಸಂಪನ್ಮೂಲ ಇಲಾಖೆಯ ಸಣ್ಣ ನೀರಾವರಿ ಅಂಕಿ ಅಂಶಗಳ ಸಮನ್ವಯೀಕರಣ ಯೋಜನೆ ಅಡಿಯಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಣ್ಣ ನೀರಾವರಿ ಗಣತಿ ಕೈಗೊಳ್ಳಲಾಗುತ್ತದೆ. ಈ ವರ್ಷದಲ್ಲಿ ನಡೆಯುವ ಆ ಗಣತಿಗೆ ಸಾರ್ವಜನಿಕರು, ರೈತರು ಸಹಕರಿಸಬೇಕು’ ಎಂದು ಜಿಲ್ಲಾಧಿಕಾರಿ ಆರ್.ಲತಾ ಹೇಳಿದರು.
ಜಿಲ್ಲಾಧಿಕಾರಿ ನ್ಯಾಯಾಲಯ ಸಭಾಂಗಣದಲ್ಲಿ ಮಂಗಳವಾರ ನಡೆದ 6ನೇ ಸಣ್ಣ ನೀರಾವರಿ ಗಣತಿಯ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
‘ಸಣ್ಣ ನೀರಾವರಿ ಇಲಾಖೆ ಸಿಬ್ಬಂದಿ ಕೈಗೊಳ್ಳುವ ಈ ಸಮೀಕ್ಷೆಗೆ ಸಾರ್ವಜನಿಕರು ಮತ್ತು ರೈತರು ಕೊಳವೆ ಬಾವಿಗಳು, ಅಗೆದ ಬಾವಿಗಳ ಬಗ್ಗೆ ಸಮರ್ಪಕ ಮಾಹಿತಿ ನೀಡಿ ಸಹಕರಿಸಬೇಕು’ ಎಂದು ಹೇಳಿದರು.
‘ಈ ಗಣತಿಯಿಂದ ಎಲ್ಲಾ ವಿಧದ ಸಣ್ಣ ನೀರಾವರಿ ಯೋಜನೆಗಳ ಸಮಗ್ರವಾದ ಮಾಹಿತಿ ಕ್ರೂಢೀಕರಿಸಲಾಗುತ್ತದೆ. ಗಣತಿ ಸಂದರ್ಭದಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಂಡು, ಅಂತರ ಕಾಯ್ದುಕೊಂಡು ಕೆಲಸ ಮಾಡಬೇಕು. ಗಣತಿ ಮಾಡಲು ಆಯಾ ತಾಲ್ಲೂಕು ಕೇಂದ್ರಗಳಲ್ಲಿ ತರಬೇತಿ ನೀಡಲು ಹಿರಿಯ ಅಧಿಕಾರಿಗಳು ಕ್ರಮಕೈಗೊಳ್ಳಬೇಕು’ ಎಂದು ತಿಳಿಸಿದರು.
ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಶಿವಕುಮಾರ್ ಮಾತನಾಡಿ, ‘ಗಣತಿದಾರರು, ಗ್ರಾಮ ಲೆಕ್ಕಾಧಿಕಾರಿಗಳು ರೈತರಿಂದ ಮಾಹಿತಿ ಪಡೆಯುವ ಜತೆಗೆ ಜಲಮೂಲಗಳ ಭೌತಿಕ ಪರಿಶೀಲನೆ ನಡೆಸಿ ಮಾಹಿತಿ ಸಂಗ್ರಹಿಸಲಾಗುತ್ತದೆ. ಈ ಗಣತಿಯಲ್ಲಿ ಸಂಗ್ರಹಿಸಲಾದ ಮಾಹಿತಿಯಿಂದ ಅಂತರ್ಜಲ ಪ್ರಮಾಣ ಅಂದಾಜಿಸಬಹುದಾಗಿದೆ’ ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ ಮಿಥುನ್ ಕುಮಾರ್, ತಹಶೀಲ್ದಾರರಾದ ನಾಗಪ್ರಶಾಂತ್, ಅರುಂಧತಿ, ಚಿಕ್ಕಬಳ್ಳಾಪುರ ನಗರಸಭೆ ಆಯುಕ್ತ ಲೋಹಿತ್ ಕುಮಾರ್ ಸಭೆಯಲ್ಲಿ ಹಾಜರಿದ್ದರು.