ಚಿಂತಾಮಣಿ:ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಮುಂಬೈನ ದಾದರ್ನಲ್ಲಿರುವ ರಾಜಗೃಹದ ಮೇಲೆ ದಾಳಿ ನಡೆಸಿರುವ ಕಿಡಿಗೇಡಿಗಳನ್ನು ಬಂಧಿಸಿ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿ ಮಾದಿಗ ದಂಡೋರ ಮಾದಿಗ ಮೀಸಲಾತಿ ಹೋರಾಟ ಸಮಿತಿ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.
ಕೊರೊನಾ ಹಿನ್ನೆಲೆಯಲ್ಲಿ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿ ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು.
‘ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದಲೂ ಅಂಬೇಡ್ಕರ್ ಮತ್ತು ಸಂವಿಧಾನದ ಬಗ್ಗೆಒಂದಲ್ಲ ಒಂದು ರೀತಿಯಲ್ಲಿ ಟೀಕೆ, ವ್ಯಂಗ್ಯದ ಹೇಳಿಕೆಗಳನ್ನು ನೀಡಲಾಗುತ್ತಿದೆ. ಸಂವಿಧಾನದ ಪರಾಮರ್ಶೆ ಹೆಸರಿನಲ್ಲಿ ಸಂವಿಧಾನದ ಬದಲಾವಣೆಗೆ ಸಂಚು ನಡೆಸುತ್ತಿದ್ದಾರೆ’ ಎಂದು ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಎಂ.ವಿ.ರಾಮಪ್ಪ ಆರೋಪಿಸಿದರು.
‘ಸಂವಿಧಾನವನ್ನು ಅಂಬೇಡ್ಕರ್ ಅವರೊಬ್ಬರೇ ರಚಿಸಿಲ್ಲ, ಸಂವಿಧಾನದ ಬದಲಾವಣೆಗಾಗಿಯೇ ಅಧಿಕಾರಕ್ಕೆ ಬಂದಿದ್ದೇವೆ ಎಂದು ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಸಚಿವರು, ಸಂಸದರು ಬಹಿರಂಗವಾಗಿ ಹೇಳಿಕೆ ನೀಡಿದರೂ ಪ್ರಧಾನಿ ಅಥವಾ ಬಿಜೆಪಿ ಯಾವುದೇ ಕ್ರಮಕೈಗೊಂಡಿಲ್ಲ. ಬಿಜೆಪಿ ಮುಖಂಡರು, ಸಂಘ ಪರಿವಾರದವರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ’ ಎಂದು ಟೀಕಿಸಿದರು.
ಈಗ ಅಂಬೇಡ್ಕರ್ ನಿವಾಸದ ಮೇಲೆಯೇ ದಾಳಿ ನಡೆಸಿದ್ದಾರೆ. ಆರೋಪಿಗಳನ್ನು ಪತ್ತೆಮಾಡಿ ಕಠಿಣ ಕ್ರಮಕೈಗೊಳ್ಳಬೇಕು. ಈ ಘಟನೆಯಲ್ಲೂ ಬಿಜೆಪಿ ಕಂಡುಕಾಣದಂತೆ ನಡೆದುಕೊಂಡರೆ ಹೋರಾಟ ತೀವ್ರಗೊಳಿಸಲಾಗುವುದು ಎಂದರು.
ತಹಶೀಲ್ದಾರ್ ಹನುಮಂತರಾಯಪ್ಪ ಮನವಿ ಸ್ವೀಕರಿಸಿದರು. ಸಮಿತಿ ರಾಜ್ಯ ಉಪಾಧ್ಯಕ್ಷ ಪಿ.ಎಂ.ನರಸಿಂಹಯ್ಯ, ಪ್ರಧಾನ ಕಾರ್ಯದರ್ಶಿ ದೇವರಾಜ್, ಮುಖಂಡರಾದ ಮುನಿವೆಕಟರಾಯಪ್ಪ, ಎನ್.ಸುರೇಶ್, ಕದಿರಪ್ಪ, ನರಸಿಂಹಲು, ಧನಲಕ್ಷ್ಮಿ ಉಪಸ್ಥಿತರಿದ್ದರು.