ಶಿಡ್ಲಘಟ್ಟ: 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ ಎಂದು ತಾಲ್ಲೂಕು ಕಾರ್ಮಿಕ ನಿರೀಕ್ಷಕಿ ವಿಜಯಲಕ್ಷ್ಮಿ ಹೇಳಿದರು.
ನಗರದ ಸರ್ಕಾರಿ ಬಸ್ ನಿಲ್ದಾಣದ ಆವರಣದಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕರ (ನಿಷೇಧ ಮತ್ತು ನಿಯಂತ್ರಣ ) ಕಾಯಿದೆ ಬಗ್ಗೆ ಅರಿವು ಮೂಡಿಸುವ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ತಾಲ್ಲೂಕಿನಲ್ಲಿ ಬಾಲ ಕಾರ್ಮಿಕರ ಹಾಗೂ ಕಿಶೋರ ಕಾರ್ಮಿಕರ ಕಾರ್ಮಿಕರ ತಪಾಸಣೆ ಕಾರ್ಯ ನಿರಂತರವಾಗಿ ನಡೆಯುತ್ತಿದ್ದು, ತಪಾಸಣೆ ವೇಳೆ ಬಾಲಕರನ್ನು ದುಡಿಸಿಕೊಳ್ಳುವುದು ಕಂಡುಬಂದರೆ 6 ತಿಂಗಳಿಂದ ಎರಡು ವರ್ಷ ಜೈಲು ಶಿಕ್ಷೆ ಹಾಗೂ ₹20 ಸಾವಿರದಿಂದ ₹50 ಸಾವಿರ ವರೆಗಿನ ದಂಡ ವಿಧಿಸಲು ಕಾಯಿದೆಯಡಿ ಅವಕಾಶವಿದೆ ಎಂದು ತಿಳಿಸಿದರು.
ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕರನ್ನು ರಕ್ಷಿಸಿ ಪುನರ್ವಸತಿ ಕಲ್ಪಿಸಿ ಶಿಕ್ಷಣ ಮುಂದುವರೆಸುವ ಸಲುವಾಗಿ ಜೂ 1ರಿಂದ ಜೂನ್ 30 ರವರೆಗೂ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತದೆ ಎಂದರು.
ಶಿಡ್ಲಘಟ್ಟ ನಗರದ ಗ್ಯಾರೇಜ್ವೊಂದರಲ್ಲಿ ಕಿಶೋರ ಕಾರ್ಮಿಕನಾಗಿ ದುಡಿಯುತ್ತಿದ್ದ ಕಿಶೋರ ಕಾರ್ಮಿಕನನ್ನು ರಕ್ಷಣೆ ಮಾಡಿ ಶಾಲೆಗೆ ದಾಖಲು ಮಾಡಲಾಯಿತು.
ಕಾರ್ಮಿಕ ನಿರೀಕ್ಷಕಿ ವಿಜಯಲಕ್ಷ್ಮಿ, ಬಚಪಾನ್ ಬಚಾವೋ ಆಂದೋಲನದ ರಾಜ್ಯ ಕಾರ್ಯಕ್ರಮಾಧಿಕಾರಿ ಮಹಮ್ಮದ್ ರಿಯಾಜ್, ಬಾಲಕಾರ್ಮಿಕ ಸೊಸೈಟಿಯ ಯೋಜನಾ ನಿರ್ದೇಶಕ ರಮೇಶ್, ಶಿಕ್ಷಣ ಇಲಾಖೆಯ ಬಿಆರ್ಸಿ ಸಂಯೋಜಕ ತ್ಯಾಗರಾಜ್ ಹಾಜರಿದ್ದರು.