ಚಿಂತಾಮಣಿ: ಚಿಂತಾಮಣಿ–ಶ್ರೀನಿವಾಸಪುರ ರಸ್ತೆಯ ಮಾಡಿಕೆರೆ ಕ್ರಾಸ್ ಹಾಗೂ ದೊಡ್ಡಗಂಜೂರು ಗ್ರಾಮದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದ್ವಿಚಕ್ರ ವಾಹನ ಸವಾರ ಬುಧವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ದೊಡ್ಡಗಂಜೂರು ಗ್ರಾಮದ ಮಧುಸೂದನ್(36) ಮೃತರು. ಇವರು ಚಿಂತಾಮಣಿಯಲ್ಲಿರುವ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಪ್ರತಿ ನಿತ್ಯವು ಬೆಳಿಗ್ಗೆ ದ್ವಿಚಕ್ರ ವಾಹನದಲ್ಲಿ ಬಂದು ರಾತ್ರಿ ಊರಿಗೆ ವಾಪಸ್ ಹೋಗುತ್ತಿದ್ದರು. ಅದೇ ರೀತಿ ಮಂಗಳವಾರ ಕೆಲಸ ಮುಗಿಸಿಕೊಂಡು ಊರಿಗೆ ಹೋಗುವಾಗ ಈ ಅವಘಡ ಸಂಭವಿಸಿದೆ.
ಮಂಗಳವಾರ ರಾತ್ರಿ ಒಂಬತ್ತು ಗಂಟೆ ವೇಳೆ ಚಿಂತಾಮಣಿಯಿಂದ ಬೈಕ್ನಲ್ಲಿ ತೆರಳುತ್ತಿದ್ದಾಗ ಮಧುಸೂದನ್ ಅವರ ಬೈಕ್ಗೆ ಶ್ರೀನಿವಾಸಪುರದಿಂದ ಬಂದ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದ್ದು, ಚಾಲಕ ವಾಹನ ನಿಲ್ಲಸದೆ ಪರಾರಿಯಾಗಿದ್ದಾನೆ. ಸ್ಥಳೀಯರು ನೋಡಿ ಮಧುಸೂದನ್ ಅವರನ್ನು ನಗರದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದರು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕಳುಹಿಸಲಾಗಿತ್ತು.
ಆದರೆ, ಬುಧವಾರ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಮೃತನ ಮಾವ ಗ್ರಾಮಾಂತರ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.