ಶಿಡ್ಲಘಟ್ಟ: ‘ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಆಡಳಿತಾವಧಿಯಲ್ಲಿ ನಡೆದ ಹಗರಣಗಳಿಂದ ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚುವಂತಾಯಿತು. ನರೇಂದ್ರಮೋದಿ ದೇಶದ ಪ್ರಧಾನಿಯಾದ ನಂತರ ವಿಶ್ವದಲ್ಲಿಯೇ ಭಾರತಕ್ಕೆ ವಿಶೇಷ ಸ್ಥಾನ ಮಾನ ದೊರೆತಿದೆ’ ಎಂದು ಆರೋಗ್ಯ ಹಾಗೂ ಜಿಲ್ಲಾ ಉಸುವಾರಿ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ತಾಲ್ಲೂಕಿನ ಹಂಡಿಗನಾಳದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಬಿಜೆಪಿ ಅಭ್ಯರ್ಥಿಗಳು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.
‘ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದು ಸುಮಾರು ಆರು ವರ್ಷಗಳು ಕಳೆದಿವೆಯಾದರೂ ಒಂದೇ ಒಂದು ಹಗರಣ, ಅಥವ ಭ್ರಷ್ಟಾಚಾರ ಆರೋಪ ಕೇಳಿಬಂದಿಲ್ಲ’ ಎಂದರು.
‘ವಿಧಾನ ಪರಿಷತ್ನಲ್ಲಿ ಇತ್ತೀಚೆಗೆ ಕಾಂಗ್ರೆಸ್ನವರು ನಡೆದುಕೊಂಡ ರೀತಿಯನ್ನು ಇಡೀ ದೇಶದ ಜನತೆ ಕಂಡಿದ್ದು ಕನ್ನಡಿಗರ ತಲೆ ತಗ್ಗಿಸುವಂತಹ ಕೆಲಸ ಮಾಡಿದೆ. ಕಾಂಗ್ರೆಸ್ ಪಕ್ಷವನ್ನು ನಾವು ಏನು ಮಾಡಬೇಕಾಗಿಲ್ಲ. ಬದಲಿಗೆ ದೇಶದ ಜನರೇ ಈಗಾಗಲೇ ಕಾಂಗ್ರೆಸ್ ಅನ್ನು ನಿರ್ಲಕ್ಷಿಸಿದ್ದಾರೆ’ ಎಂದರು.
‘ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಜಯಶೀಲರನ್ನಾಗಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ದುಡಿಯಬೇಕು. ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯಬೇಕಿದ್ದರೆ ಅದು ಕೇವಲ ಬಿಜೆಪಿಯಿಂದ ಮಾತ್ರ ಸಾಧ್ಯ. ಕ್ಷೇತ್ರದ ಯಾರೂ ಕುಗ್ಗುವ ಅಗತ್ಯವಿಲ್ಲ ಜಿಲ್ಲಾ ಉಸ್ತುವಾರಿ ಸಚಿವರಾಗಿ ಮಾತ್ರ ಅಲ್ಲ ಬದಲಿಗೆ ಮುಂಬರುವ ಚುನಾವಣೆಯವರೆಗೂ ಈ ಕ್ಷೇತ್ರಕ್ಕೂ ನಾನೇ ಶಾಸಕನಾಗಿ ನಿಮ್ಮೊಂದಿಗಿರುತ್ತೇನೆ’ ಎಂದರು.
ಸಂಸದ ಎಸ್.ಮುನಿಸ್ವಾಮಿ ಮಾತನಾಡಿ, ‘ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳು ರೇಷ್ಮೆ, ಹಾಲು ಹಾಗೂ ಬಂಗಾರಕ್ಕೆ ಹೆಸರುವಾಸಿಯಾಗಿದೆ. ಕೋಲಾರ ಲೋಕಸಭೆ ಕ್ಷೇತ್ರದಿಂದ ಸಾವಿರಾರು ಜನ ಪ್ರತಿನಿತ್ಯ ಬೇರೆಡೆಗೆ ಕೆಲಸ ಅರಸಿಕೊಂಡು ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ ಜಿಲ್ಲೆಯಲ್ಲಿ ಕೈಗಾರಿಕೆ ವಲಯಗಳನ್ನು ಸ್ಥಾಪಿಸಲು ಈಗಾಗಲೇ ಮುಂದಾಗಿದ್ದು ಮುಂಬರುವ ದಿನಗಳಲ್ಲಿ ಶಿಡ್ಲಘಟ್ಟದಲ್ಲಿಯೂ ಒಂದು ಟೆಕ್ಸ್ ಟೈಲ್ ಪಾರ್ಕ್ ನಿರ್ಮಿಸುವ ಯೋಜನೆ ರೂಪಿಸಲಾಗುತ್ತಿದೆ’ ಎಂದರು.
ಈ ಸಂದರ್ಭದಲ್ಲಿ ನಗರ ಮಂಡಲಾಧ್ಯಕ್ಷ ಎಸ್.ರಾಘವೇಂದ್ರ, ಗ್ರಾಮಾಂತರ ಮಂಡಲಾಧ್ಯಕ್ಷ ಸುರೇಂದ್ರಗೌಡ, ಮಾಜಿ ಶಾಸಕ ಎಂ.ರಾಜಣ್ಣ, ಜಿಲ್ಲಾ ಪಂಚಾಯಿತಿ ಸದಸ್ಯ ಎ.ಎಂ.ಜಯರಾಮರೆಡ್ಡಿ, ನಗರಸಭೆ ಸದಸ್ಯ ನಾರಾಯಣಸ್ವಾಮಿ, ರಮೇಶ್ಬಾಯಿರಿ, ಕೃಷ್ಣಮೂರ್ತಿ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.