ಚಿಕ್ಕಬಳ್ಳಾಪುರ: ರಾಜ್ಯ ಸರ್ಕಾರದ ಸಚಿವರ ಮೌಲ್ಯಮಾಪನಕ್ಕಾಗಿ ಜಿಲ್ಲೆಯ ಪ್ರಸಿದ್ಧ ನಂದಿಗಿರಿಧಾಮದಲ್ಲಿ ಜ.8 ಮತ್ತು 9ರಂದು ಬಿಜೆಪಿಯು ಸಭೆ ನಡೆಸುವ ಸಾಧ್ಯತೆ ಇದೆ. ಈ ಸಂಬಂಧ ಸಚಿವರಾದ ಆರ್.ಅಶೋಕ ಮತ್ತು ಮುನಿರತ್ನ ಅವರು ಭಾನುವಾರ ಗಿರಿಧಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಹಾಗೂ ಅಧಿಕಾರಿಗಳು ಇದ್ದರು.
ನಂದಿಗಿರಿಧಾಮದಲ್ಲಿ ಇಲ್ಲಿಯವರೆಗೂ ರಾಜಕೀಯ ಸಭೆಗಳು ನಡೆದಿಲ್ಲ. ಆದರೆ ಈಗ ಇಲ್ಲಿ ಬಿಜೆಪಿ ಸಭೆ ನಡೆಸಲು ಹೊರಟಿರುವುದು ಚರ್ಚೆಗೆ ಕಾರಣವಾಗಿದೆ. ಇಲ್ಲಿ ರಾಜಕೀಯ ಸಭೆಗಳಿಗೆ ಅವಕಾಶ ನೀಡಬಾರದು. ಅವಕಾಶ ನೀಡಿದರೆ ಮುಂದಿನ ದಿನಗಳಲ್ಲಿ ಎಲ್ಲ ರಾಜಕೀಯ ಪಕ್ಷಗಳವರೂ ಇಲ್ಲಿ ಸಭೆ ನಡೆಸುವ ಸಾಧ್ಯತೆ ಇರುತ್ತದೆ. ಇದು ಕೆಟ್ಟ ಸಂಪ್ರದಾಯಕ್ಕೆ ನಾಂದಿಯಾಗುತ್ತದೆ ಎಂದುಪರಿಸರ ಪ್ರಿಯರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.
ಸಭೆಗಾಗಿ ರಾಜ್ಯದ ಐದು ಕಡೆಗಳಲ್ಲಿ ಸ್ಥಳಗಳನ್ನು ಗುರುತಿಸಲಾಗಿದೆ. ಅದರಲ್ಲಿ ನಂದಿಯೂ ಒಂದು. ಯಾವ ಸ್ಥಳದಲ್ಲಿ ಸಭೆ ನಡೆಸಬೇಕು ಎನ್ನುವ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ ಎಂದು ಖಚಿತ ಮೂಲಗಳು ತಿಳಿಸುತ್ತವೆ.
ಈ ಸಭೆಯಲ್ಲಿ ಪಕ್ಷದ ರಾಷ್ಟ್ರೀಯ ನಾಯಕರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವರು ಪಾಲ್ಗೊಳ್ಳುವರು ಎನ್ನಲಾಗುತ್ತಿದೆ.