ಶಿಡ್ಲಘಟ್ಟ: ‘ರಾಜ್ಯದಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಜನ ಅಧಿಕಾರ ಕೊಡಲಿಲ್ಲ ಎಂದು ಕೇಂದ್ರದ ಬಿಜೆಪಿ ಸರ್ಕಾರ ರಾಜ್ಯದ ಮೇಲೆ ದ್ವೇಷ ಸಾಧಿಸುವ ಕೆಲಸ ಮಾಡುತ್ತಿದೆ. ಕಾಂಗ್ರೆಸ್ ನಡೆಸುತ್ತಿರುವ ಖಾಲಿ ಚೊಂಬಿನ ಅಭಿಯಾನಕ್ಕೆ ಕೇಂದ್ರ ಸರ್ಕಾರ ಬೆದರಿದೆ’ ಎಂದು ರಾಜ್ಯಸಭಾ ಸದಸ್ಯ ಎಂ.ವಿ.ರಾಜೀವ್ಗೌಡ ಹೇಳಿದರು.
ತಾಲ್ಲೂಕಿನ ಬೆಳ್ಳೂಟಿ ಗ್ರಾಮದಲ್ಲಿ ಇತ್ತೀಚೆಗೆ ನಿಧನರಾದ ಪರಿಸರ ಪ್ರೇಮಿ ಸಂತೋಷ್ ಬೆಳ್ಳೂಟಿ ಅವರ ಮನೆಗೆ ಭೇಟಿನೀಡಿ ಶ್ರದ್ಧಾಂಜಲಿ ಸಲ್ಲಿಸಿ ಹೇಳಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ‘ರಾಜ್ಯದಲ್ಲಿ ಕನಿಷ್ಠ 20 ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ರಾಜ್ಯದ ಮತದಾರರು ಕಾಂಗ್ರೆಸ್ ಕೈ ಹಿಡಿದಿದ್ದಾರೆ. ಇದೇ ವೇಳೆ ರಾಜ್ಯದ ಮತದಾರರು ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ’ ಎಂದು ತಿಳಿಸಿದರು.
‘ಬರ ಪರಿಹಾರ ಬಿಡುಗಡೆ ವಿಚಾರದಲ್ಲೂ ಕೇಂದ್ರ ಸರ್ಕಾರ ಇಷ್ಟೊಂದು ಕೀಳು ಮಟ್ಟಕ್ಕೆ ಇಳಿಯಬಾರದಾಗಿತ್ತು. ರಾಜ್ಯ ಸರ್ಕಾರವು ಸಮಯಕ್ಕೆ ಸರಿಯಾಗಿ ಬರ ಪರಿಸ್ಥಿತಿಯ ಅಧ್ಯಯನ ಮಾಡಿ ನಷ್ಟದ ವರದಿಯನ್ನು ಸೂಕ್ತ ಸಮಯಕ್ಕೆ ಸೂಕ್ತ ರೀತಿಯಲ್ಲಿ ಸಲ್ಲಿಸಲಾಗಿತ್ತು. ರಾಜ್ಯದ 223 ತಾಲ್ಲೂಕುಗಳಲ್ಲಿ ರಾಜ್ಯ ಸರ್ಕಾರ ಬರ ಘೋಷಿಸಿತ್ತು. ₹18 ಸಾವಿರ ಕೋಟಿ ಬೆಳೆ ನಷ್ಟ ಆಗಿದ್ದು ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದರೂ ನಾನಾ ಕಾರಣ ನೀಡಿ ಪರಿಹಾರ ವಿಳಂಬ ಮಾಡಿದ್ದು ಸರಿಯಲ್ಲ’ ಎಂದರು.
‘ರೈತರ ಹಿತದೃಷ್ಟಿಯಿಂದ ಮತ್ತು ನಮ್ಮ ಹಕ್ಕು ನಾವು ಪಡೆಯಲು ಕೋರ್ಟ್ ಮೆಟ್ಟಿಲು ಹತ್ತಿ ನ್ಯಾಯ ಪಡೆಯಬೇಕಾಯಿತು. ಬರ ಪರಿಹಾರಕ್ಕಾಗಿ ನ್ಯಾಯಾಲಯದ ಕದ ತಟ್ಟುವ ಈ ಸ್ಥಿತಿ ಯಾರಿಗೂ ಮುಂದೆ ಬಾರದಿರಲಿ’ ಎಂದರು.
ಕಾಂಗ್ರೆಸ್ ಮುಖಂಡ ಪುಟ್ಟು ಆಂಜಿನಪ್ಪ, ಕೆಪಿಸಿಸಿ ಮುಖ್ಯ ವಕ್ತಾರ ಎ.ಎನ್.ನಟರಾಜ್ಗೌಡ, ಆನಂದ್ ಪ್ರಸಾದ್, ನಾಗೇಶ್ಗೌಡ, ಶಶಿಕುಮಾರ್, ದೇವರಾಜ್, ರಾಜಣ್ಣ, ಪ್ರಮೋದ್, ಮುನಿರಾಜು, ರಮೇಶ್, ವೆಂಕಟೇಶ್, ರಾಜ್ಕುಮಾರ್ ಹಾಜರಿದ್ದರು.