ಚಿಕ್ಕಬಳ್ಳಾಪುರ: ಹಿರೇನಾಗವಲ್ಲಿ ಸ್ಫೋಟ ಸಂಭವಿಸಿ ಮೂರು ದಿನಗಳಾದರೂ ಘಟನಾ ಸ್ಥಳದಲ್ಲಿ ಮೃತದೇಹಗಳ ಅವಶೇಷಗಳ ಎಲ್ಲೆಂದರಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಇದು ಪೊಲೀಸ್ ಅಧಿಕಾರಿಗಳ ಬೇಜವಾಬ್ದಾರಿ ಮತ್ತು ನಿರ್ಲಕ್ಷಕ್ಕೆ ಸ್ಪಷ್ಟ ನಿದರ್ಶನ ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ರವಿ ಕೃಷ್ಣಾರೆಡ್ಡಿ ಆರೋಪಿಸಿದ್ದಾರೆ.
ಗುರುವಾರ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆಯ ಬಗ್ಗೆ ಜನರಿಗೆ ತಪ್ಪು ಮಾಹಿತಿ ನೀಡುವ ಮೂಲಕ ಗಮನ ಬೇರೆಡೆಗೆ ಸೆಳೆಯಲು ಪ್ರಯತ್ನಿಸಲಾಗುತ್ತಿದೆ ಎಂದು ದೂರಿದರು.
‘ಇದು ಕೇವಲ ಅಪರಾಧ ನಡೆದ ಸ್ಥಳವಾಗಿ ಉಳಿದಿಲ್ಲ. ಇದು ಜನರ ಓಡಾಟ ಸ್ಥಳವಾಗಿದೆ. ಮೃತದೇಹಗಳ ಅವಶೇಷಗಳನ್ನು ವೈಜ್ಞಾನಿಕ ರೀತಿಯಲ್ಲಿ ವಿಂಗಡಿಸುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದೆ’ ಎಂದು ಹೇಳಿದರು.
‘ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ ಅತಿ ಹೆಚ್ಚಾಗಿ ಅಕ್ರಮ ಕಲ್ಲು ಗಣಿಗಾರಿಕೆಯನ್ನು ನಡೆಸಲಾಗುತ್ತಿದೆ. ಇದರ ವಿರುದ್ಧ ಪೊಲೀಸ್ ಅಧಿಕಾರಿಗಳು ಮತ್ತು ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಂಡಿಲ್ಲ. ಜಿಲೆಟಿನ್ ಸ್ಫೋಟಕ ಸರಬರಾಜು ಕಾನೂನಿನಡಿ ಬರುತ್ತದೆ. ಹಾಗಾಗಿ ಸರ್ಕಾರದ ವೈಫಲ್ಯಕ್ಕೆ ದುರಂತಕ್ಕೆ ಪ್ರಮುಖ ಕಾರಣ’ ಎಂದು ಕಿಡಿಕಾರಿದರು.
‘ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ರುವುದು ಕೇವಲ ನಾಟಕ. ಪ್ರಮಾಣಿಕ ತನಿಖೆ ನಿರೀಕ್ಷಿಸಲು ಸಾಧ್ಯವಿಲ್ಲ. ಸತ್ಯಾಂಶ ಹೊರಬರಬೇಕಾದರೆ ಹೈಕೋರ್ಟ್ ನ್ಯಾಯಮೂರ್ತಿಯಿಂದ ನ್ಯಾಯಾಂಗ ತನಿಖೆ ನಡೆಸಬೇಕು’ ಎಂದರು.
ಪ್ರಧಾನ ಕಾರ್ಯದರ್ಶಿ ಸಿ.ಎನ್. ದೀಪಕ್, ರಾಜ್ಯ ಕಾರ್ಯದರ್ಶಿ ಮಲ್ಲಿ ಕಾರ್ಜುನ್ ಭಟ್ಟರಹಳ್ಳಿ, ಜಂಟಿ ಕಾರ್ಯ ದರ್ಶಿ ಬಿ.ಕೆ. ಪ್ರಸನ್ನ, ಆನಂದ್ ಇದ್ದರು.