ಗೌರಿಬಿದನೂರು: ಗ್ರಾಮೀಣ ಮಕ್ಕಳಲ್ಲಿ ಪಠ್ಯದ ಜತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನೆರವಾಗುವ ವಿಚಾರಗಳನ್ನು ತಿಳಿಸುವ ಮೂಲಕ ಅವರ ಭವಿಷ್ಯಕ್ಕೆ ಆಸರೆಯಾಗಬೇಕಿದೆ ಎಂದು ಜಿ.ಪಂ. ಸದಸ್ಯ ಕೆ. ಕೆಂಪರಾಜು ತಿಳಿಸಿದರು.
ತಾಲ್ಲೂಕಿನ ಕುದುರೆಬ್ಯಾಲ್ಯ ಗ್ರಾಮದಲ್ಲಿನ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನೆರವಾಗುವ ಪುಸ್ತಕಗಳನ್ನು ವಿತರಿಸಿ ಅವರು ಮಾತನಾಡಿದರು.
ಈ ಬಾರಿಯ ಶೈಕ್ಷಣಿಕ ವರ್ಷದಲ್ಲಿ ಕೋವಿಡ್ ಪರಿಣಾಮ ಮಕ್ಕಳು ಶಾಲೆಗೆ ತೆರಳಲು ಸಾಧ್ಯವಾಗುತ್ತಿಲ್ಲ. ಅವರ ಭವಿಷ್ಯಕ್ಕೆ ಪೂರಕವಾದ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಪೋಷಕರು ಅವರಿಗೆ ಲ್ಯಾಪ್ ಟಾಪ್ ಮತ್ತು ಟ್ಯಾಬ್ ಕೊಡಿಸಿ ಆನ್ಲೈನ್ ಶಿಕ್ಷಣ ಕೊಡಿಸುವಷ್ಟು ಶಕ್ತರಾಗಿಲ್ಲ. ಈ ನಿಟ್ಟಿನಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪಠ್ಯದ ವಿಷಯ ಕಲಿಕೆಯ ಜತೆಗೆ ಮುಂದಿನ ಭವಿಷ್ಯಕ್ಕೆ ಆಸರೆಯಾಗಬಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರಕವಾದ ಮಾಹಿತಿ ಒದಗಿಸಲು ಸಹಕಾರಿಯಾಗುವಂತೆ ಉತ್ತಮ ಪುಸ್ತಕಗಳನ್ನು ನೀಡಲಾಗಿದೆ ಎಂದು ತಿಳಿಸಿದರು.
ವಕೀಲ ಎಚ್.ಎಲ್. ವೆಂಕಟೇಶ್ ಮಾತನಾಡಿ, ಸ್ಪರ್ಧಾತ್ಮಕ ಬದುಕಿನಲ್ಲಿ ಮಕ್ಕಳಿಗೆ ಕೇವಲ ತರಗತಿಯ ಕಲಿಕೆ ಹಾಗೂ ಆನ್ಲೈನ್ ಕಲಿಕೆಯ ಜತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವುದು ಅತ್ಯವಶ್ಯಕವಾಗಿದೆ ಎಂದರು.
ಮಕ್ಕಳಲ್ಲಿ ಪ್ರಾಥಮಿಕ ಹಂತದಿಂದಲೇ ಸ್ಪರ್ಧಾತ್ಮಕ ಮನೋಭಾವ ಬೆಳೆಸಬೇಕು. ಇದಕ್ಕೆ ಪೂರಕವಾದ ಪ್ರೋತ್ಸಾಹ ಮತ್ತು ಮಾರ್ಗದರ್ಶನ ನೀಡಿದರೆ ಮುಂದೆ ಐಎಎಸ್ ಮತ್ತು ಕೆಎಎಸ್ ನಂತಹ ಪರೀಕ್ಷೆಗಳನ್ನು ಎದುರಿಸುವ ಸಾಮರ್ಥ್ಯ ಬೆಳೆಯುತ್ತದೆ ಎಂದು ಹೇಳಿದರು.
ಪ್ರಾಥಮಿಕ, ಪ್ರೌಢ ಹಾಗೂ ಕಾಲೇಜು ಹಂತದ ವಿದ್ಯಾರ್ಥಿಗಳಿಗೆ ವಿವಿಧ ಸ್ಥರದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗುವ ಪುಸ್ತಕಗಳನ್ನು ವಿತರಣೆ ಮಾಡಿದರು.