ಚಿಕ್ಕಬಳ್ಳಾಪುರ: ಕಾನೂನಿನ ಅರಿವು ಎಲ್ಲರಲ್ಲೂ ಮೂಡಬೇಕೆಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ ಎಂದು ಪ್ರಧಾನ ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ಶಿವಲಿಂಗ ನಾಯಿಕ ಹೇಳಿದರು.
ಜಿಲ್ಲಾಡಳಿತದ ಸಭಾಂಗಣದಲ್ಲಿ ಭಾನುವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪೊಲೀಸ್ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಕೀಲರ ಸಂಘ ಹಮ್ಮಿಕೊಂಡಿದ್ದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
45 ದಿನಗಳಲ್ಲಿ ಸುಮಾರು ಇನ್ನೂರಕ್ಕೂ ಹೆಚ್ಚು ಕಾನೂನಿನ ಅರಿವು ನೆರವು ಕಾರ್ಯಕ್ರಮಗಳನ್ನು ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಾಕ್ಷರತಾ ಕಾರ್ಯಕ್ರಮ, ಕಾನೂನು ಅರಿವು ಸಪ್ತಾಹ, ಕಾನೂನು ಅರಿವು ನೆರವು ಅಭಿಯಾನವನ್ನು ಯಶಸ್ವಿಯಾಗಿ ಹಮ್ಮಿಕೊಳ್ಳಲಾಗಿದೆ ಎಂದರು.
ಪೋಕ್ಸೋ ಕಾಯ್ದೆ, ಗ್ರಾಹಕರ ಹಕ್ಕು, ಮಕ್ಕಳ ಹಕ್ಕು, ಹಿರಿಯ ನಾಗರಿಕರ ಹಕ್ಕು, ಅಂಗವಿಕಲರ ಕಾನೂನು ಹಕ್ಕು, ಬಾಲಕಾರ್ಮಿಕ ಪದ್ಧತಿ ವಿರೋಧಿ ಜಾಗೃತಿ, ಲೈಂಗಿಕ ಕಿರುಕುಳಸುರಕ್ಷತಾ ಕಾಯ್ದೆ, ಮೋಟಾರ್ ವಾಹನ ಕಾಯ್ದೆ ಬಗ್ಗೆ ಜಾಗೃತಿ ಯವನ್ನುಜಿಲ್ಲೆಯಾದ್ಯಂತ ಯಶಸ್ವಿಯಾಗಿ ಮಾಡಲಾಯಿತು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ ಮಿಥುನ್ ಕುಮಾರ್ ಮಾತನಾಡಿ, ಸುಮಾರು ಒಂದುವರೆ ವರ್ಷದಿಂದ ಕೋವಿಡ್ಸಂದಿಗ್ಧ ಸಂದರ್ಭದಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಪ್ರತಿ ಮನೆ ಮನೆಗೂ ತೆರಳಿ ಸಾರ್ವಜನಿಕರ ಆರೋಗ್ಯ ವಿಚಾರಿಸಿ, ಕೋವಿಡ್ ಲಸಿಕೆ ಹಾಕಿಸುವಲ್ಲಿ ಸಾಕಷ್ಟು ಶ್ರಮಪಟ್ಟಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
2021-22ನೇ ಸಾಲಿನ ಹೊಯ್ಸಳ ಮತ್ತು ಕೆಳದಿ ಚನ್ನಮ್ಮ ಜಿಲ್ಲಾಮಟ್ಟದ ಪ್ರಶಸ್ತಿಗೆ ಆಯ್ಕೆಯಾದ ಎಂಟು ಜನ ಮಕ್ಕಳನ್ನು ಗೌರವಿಸಲಾಯಿತು. ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರಿಗೆ ಅಭಿನಂದನಾ ಪ್ರಶಸ್ತಿ ನೀಡಲಾಯಿತು. ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿದ್ದು ಅದರಲ್ಲಿ ವಿಜೇತರಾದವರಿಗೆ ಪ್ರಶಸ್ತಿ ಮತ್ತು ಬಹುಮಾನವನ್ನು ವಿತರಿಸಲಾಯಿತು.
ಹೆಚ್ಚುವರಿ ಜಿಲ್ಲಾ ಜಿಲ್ಲಾ ಸೆಷನ್ಸ್ ನ್ಯಾಯಾಧೀಶರಾದ ಭಾನುಮತಿ ಬಿ.ಸಿ, ಹಿರಿಯ ಸಿವಿಲ್ ನ್ಯಾಯಾಧೀಶ ಲಕ್ಷ್ಮಿಕಾಂತ್ ಜೆ.ಮಿಸ್ಕಿನ್, ಮೂರನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ಸನತ್ ಸಿ.ವಿ, ಜಿಲ್ಲಾ ಕೌಟುಂಬಿಕ ನ್ಯಾಯಾಲಯದ ನ್ಯಾಯಧೀಶರಾದ ವಿವೇಕಾನಂದ್ ಎಸ್.ಪಂಡಿತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಇಂದಿರಾ ಆರ್.ಕಬಾಡೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಅಶ್ವತಮ್ಮ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಮದ್ ಉಸ್ಮಾನ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.