ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಶಕದಿಂದ ಮುಚ್ಚಿದ್ದ ಶಾಲೆ ಪುನರಾರಂಭ

ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ
Last Updated 2 ನವೆಂಬರ್ 2021, 5:40 IST
ಅಕ್ಷರ ಗಾತ್ರ

ಚಿಂತಾಮಣಿ: ತಾಲ್ಲೂಕಿನ ಗಡಿಭಾಗದಲ್ಲಿರುವ ಧರ್ಮವಾರಹಳ್ಳಿಯಲ್ಲಿ ಕಳೆದ 10 ವರ್ಷಗಳಿಂದ ಮುಚ್ಚಿದ್ದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ಕನ್ನಡ ರಾಜ್ಯೋತ್ಸವ ದಿನವಾದ ಸೋಮವಾರ ಪುನರಾರಂಭ
ಮಾಡಲಾಯಿತು.

ಕರ್ನಾಟಕ ರಕ್ಷಣಾ ವೇದಿಕೆಯ ಸ್ವಾಭಿಮಾನಿ ಬಣವು ರಾಜ್ಯದಲ್ಲಿ 186 ಶಾಲೆಗಳನ್ನು ದತ್ತು ಪಡೆದುಕೊಂಡು ಅಭಿವೃದ್ಧಿಪಡಿಸುತ್ತಿದೆ ಎಂದುಜಿಲ್ಲಾ ಘಟಕದ ಅಧ್ಯಕ್ಷ ಅಗ್ರಹಾರ ಮೋಹನ್ ತಿಳಿಸಿದರು.

ಸ್ವಾಭಿಮಾನಿ ಬಣವು ಕನ್ನಡ ಭಾಷೆ ಹಾಗೂ ಕನ್ನಡ ಶಾಲೆಗಳ ಉಳಿವಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ದತ್ತುಪಡೆದುಕೊಂಡಿರುವ ಶಾಲೆಗಳಿಗೆ ವಿವಿಧ ಉದ್ಯಮಿಗಳಿಂದ ಅನುದಾನವನ್ನು ಕೊಡಿಸಿ ಮೂಲ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಮುಚ್ಚಿರುವ ಸರ್ಕಾರಿ ಶಾಲೆಗಳ ಪುನರಾರಂಭಕ್ಕೂ ಸಹಕಾರ ನೀಡುತ್ತಿದೆ ಎಂದರು.

ಕನ್ನಡದಲ್ಲೇ ಮಾತನಾಡಬೇಕು. ಕನ್ನಡವೇ ಜಾತಿ, ಧರ್ಮ, ದೇವರು ಎಂದು ರಕ್ತಗತ ಮಾಡಿಕೊಳ್ಳಬೇಕು. ಕೇವಲ ತೋರಿಕೆಗೆ ಹೋರಾಟ ಮಾಡುವುದು, ರಾಜ್ಯೋತ್ಸವ ಆಚರಣೆಗೆ ಮಾತ್ರ ಸೀಮಿತಗೊಳಿಸುವುದು ಸರಿಯಲ್ಲ. ಗಡಿಭಾಗದಲ್ಲಿ ಇತರೆ ಭಾಷೆ ಮಾತನಾಡಿದರೂ ಕನ್ನಡದಲ್ಲೇ ಉತ್ತರಿಸುವುದನ್ನು ಕಲಿಯಬೇಕು ಎಂದರು.

ಏನಿಗದಲೆಯ ನವೋದಯ ಶಾಲೆಯ ಉಪಪ್ರಾಂಶುಪಾಲ ಸಿ.ವಿ.ಮಂಜುನಾಥ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮುಖಂಡ ಕೆ.ವಿ.ಚೌಡಪ್ಪ ಮಾತನಾಡಿ ಸರ್ಕಾರಿ ಶಾಲೆಗಳನ್ನು ಉಳಿಸಿ, ಅಭಿವೃದ್ಧಿಪಡಿಸಲು ಪೋಷಕರ ಸಹಕಾರ ಅಗತ್ಯ. ಖಾಸಗಿ ಶಾಲೆಗಳ ವ್ಯಾಮೋಹವನ್ನು ತ್ಯಜಿಸಿ ಸರ್ಕಾರಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ಸೇರಿಸಬೇಕು ಎಂದು ಮನವಿ ಮಾಡಿದರು.

ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಮಕ್ಕಳಿಗೆ ಉಚಿತ ಶಾಲಾ ಬ್ಯಾಗ್‌ಗಳನ್ನು ವಿತರಿಸಲಾಯಿತು.

ಗ್ರಾಮ ಪಂಚಾಯಿತಿ ಸದಸ್ಯ ಮಂಜುನಾಥ್, ನಾಗರಾಜ್, ಎಸ್‌ಡಿಎಂಸಿ ಅಧ್ಯಕ್ಷ ಮಧು, ಕರವೇ ಸ್ವಾಭಿಮಾನಿ ಬಣದ ಜಿಲ್ಲಾ ಘಟಕದ ಉಪಾಧ್ಯಕ್ಷ ಎಂ.ವಿ.ವಿನಯ್ ಕುಮಾರ್, ಗ್ರಾಮಸ್ಥರಾದ ಡಿ.ಎ.ಮಂಜುನಾಥ್, ರಮೇಶ್, ಡಿ.ಎಸ್.ಮಂಜುನಾಥ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT