ಚಿಂತಾಮಣಿ: ಚಿಂತಾಮಣಿ-ಚಿಕ್ಕಬಳ್ಳಾಪುರ ರಸ್ತೆಯ ಉಪ್ಪರಪೇಟೆ ಬಳಿ ಗುರುವಾರ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಮತ್ತು ಆಟೊ ನಡುವೆ ಡಿಕ್ಕಿ ಸಂಭವಿಸಿ ಪಟ್ಟಣದ ರಾಯಲ್ ಪದವಿ ಕಾಲೇಜಿನ ವಿದ್ಯಾರ್ಥಿ ಸೇರಿದಂತೆ ಇಬ್ಬರು ಮೃತಪಟ್ಟಿದ್ದು, ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಗಾಯಾಳುಗಳಿಗೆ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಇಬ್ಬರನ್ನು ಕೋಲಾರಕ್ಕೆ ಹಾಗೂ ಒಬ್ಬರನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.
ಸರ್ಕಾರಿ ಬಸ್ ಚಿಕ್ಕಬಳ್ಳಾಪುರದಿಂದ ಚಿಂತಾಮಣಿಗೆ ಬರುತ್ತಿತ್ತು. ಆಟೊ ಚಿಂತಾಮಣಿಯಿಂದ ಜನರನ್ನು ತುಂಬಿಸಿಕೊಂಡು ಕತ್ತರಿಗುಪ್ಪೆ ಗ್ರಾಮಕ್ಕೆ ಹೋಗುತ್ತಿತ್ತು. ಚಾಲಕನ ಅಜಾಗರೂಕತೆಯಿಂದ ಬಸ್ಗೆ ಆಟೊ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಸ್ಥಳೀಯರು ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ಸಾಗಿಸಲು ನೆರವಾದರು.
ಆಟೊದಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳು ಮಧ್ಯಾಹ್ನ ಕಾಲೇಜು ಮುಗಿಸಿಕೊಂಡು ಸ್ವಗ್ರಾಮಗಳಿಗೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಸಕಾಲಕ್ಕೆ ಬಸ್ ಸಂಚಾರ ಇಲ್ಲದಿರುವುದರಿಂದ ವಿದ್ಯಾರ್ಥಿಗಳು ಆಟೊಗಳ ಮೊರೆ ಹೋಗುತ್ತಿದ್ದಾರೆ. ಆಟೊಗಳಲ್ಲಿ ನಿಯಮ ಮೀರಿ ಹೆಚ್ಚಿನ ಜನರನ್ನು ತುಂಬಿಸಿಕೊಂಡು ಹೋಗುತ್ತಿರುವುದು ಅಪಘಾತಕ್ಕೆ ಕಾರಣವಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ.