ಬಾಗೇಪಲ್ಲಿ: ‘ಸಮಾಜದಲ್ಲಿನ ಅನಿಷ್ಟ ಮೂಢನಂಬಿಕೆ ಹಾಗೂ ಬಾಲ್ಯವಿವಾಹಗಳನ್ನು ತಡೆಗಟ್ಟಲು ಪ್ರತಿಯೊಬ್ಬರು ಮುಂದಾಗಬೇಕು’ ಎಂದು ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಕರೆ ನೀಡಿದರು.
ತಾಲ್ಲೂಕಿನ ಪೈಪಾಳ್ಯ ಗ್ರಾಮದಲ್ಲಿ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಬುಧವಾರ ಹಮ್ಮಿಕೊಂಡಿದ್ದ ಅಲೆಮಾರಿ ಹಾಗೂ ಅರೆ ಅಲೆಮಾರಿ ಸಮುದಾಯಗಳ ಬಗ್ಗೆ ಜನಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
‘ಅನಾದಿ ಕಾಲದಿಂದಲೂ ಬುದ್ಧ, ಬಸವ, ಅಂಬೇಡ್ಕರ್ರಂತಹ ಮಹನೀಯರು ಜಾತಿ ಸಂಕೋಲೆಗಳಿಂದ ಹಾಗೂಮೌಢ್ಯದಿಂದ ಹೊರಬನ್ನಿ ಎಂದು ಹೇಳಿದ್ದಾರೆ.ಸ್ವಾತಂತ್ರ್ಯ ಬಂದು 74 ವರ್ಷಗಳು ಕಳೆದಿದ್ದರೂ, ಇಂದಿಗೂ ಗ್ರಾಮೀಣ ಪ್ರದೇಶಗಳಲ್ಲಿ ಕೆಲವರನ್ನು ದೂರ ಇಡುತ್ತಿದ್ದೇವೆ. ಅನೇಕ ಸಂಪ್ರದಾಯಗಳನ್ನುರೂಢಿಸಿಕೊಂಡು ಬಂದಿದ್ದಾರೆ. ಆದರೆ ಇದೀಗ ವೈಜ್ಞಾನಿಕ ಜಗತ್ತಿನಲ್ಲಿ ಇದ್ದೇವೆ. ಮನುಷ್ಯರನ್ನು ಮನುಷ್ಯರಂತೆ ಕಾಣಬೇಕಾಗಿದೆ. ಮಾನವ ಸಂಬಂಧಗಳನ್ನು ಗಟ್ಟಿಗೊಳಿಸಬೇಕಾಗಿದೆ’ ಎಂದರು.
‘ಎಲ್ಲರಿಗೂ ಹಕ್ಕು ಹಾಗೂ ಕರ್ತವ್ಯ
ಗಳು ಇದೆ. ಹಕ್ಕುಗಳನ್ನು ಬಳಿಸಿಕೊಂಡು, ಆರ್ಥಿಕವಾಗಿ ಸದೃಢರಾಗಬೇಕು. ಕೇಂದ್ರ ಹಾಗೂ ರಾಜ್ಯಸರ್ಕಾರಗಳು ವಿವಿಧ ಇಲಾಖೆ ಹಾಗೂ ನಿಗಮಗಳ ಮೂಲಕ ಅನೇಕ ಯೋಜನೆಗಳನ್ನು ಜಾರಿ ಮಾಡಿದೆ.ಸರ್ಕಾರದ ಪ್ರತಿಯೊಂದು ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಆರೋಗ್ಯ, ಶಿಕ್ಷಣ ಸೇರಿದಂತೆ ವಿವಿಧ ಮೂಲಸೌಲಭ್ಯಗಳು ಪಡೆಯುವಂತೆ ಆಗಬೇಕು’ ಎಂದರು.
‘ತಾಲ್ಲೂಕಿನ ಪೈಪಾಳ್ಯ ಗ್ರಾಮವನ್ನು ಗ್ರಾಮವಿಕಾಸದಡಿಯಲ್ಲಿ ₹1 ಕೋಟಿ ವ್ಯಯ ಮಾಡಿ, ಗ್ರಾಮವನ್ನು ಅಭಿವೃದ್ಧಿಪಡಿಸಲಾಗಿದೆ. ₹10 ಲಕ್ಷ ವೆಚ್ಚದಲ್ಲಿ ರಸ್ತೆ ಕಾಮಗಾರಿ ಮಾಡಲಾಗುವುದು. ವಿವಿಧ ಯೋಜನೆಗಳನ್ನು ಎಲ್ಲಾ ಗ್ರಾಮಗಳಿಗೆ ಹಂಚಿ, ಮಾದರಿ ಕ್ಷೇತ್ರ ಮಾಡುವ ಗುರಿ ನನಗೆ ಇದೆ’ ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಸದಸ್ಯ ಲಕ್ಷ್ಮೀನರಸಿಂಹಪ್ಪ ಮಾತನಾಡಿ, ‘ಅಲೆಮಾರಿ ಹಾಗೂ ಅರೆಅಲೆಮಾರಿ ಸಮುದಾಯ ಸೇರಿದಂತೆ ಹಿಂದುಳಿದ, ದಲಿತರು, ಅಲ್ಪಸಂಖ್ಯಾತರಿಗೆಸರ್ಕಾರಗಳ ವಿಶೇಷ ಅನುದಾನಗಳನ್ನು ನೀಡಲಾಗಿದೆ. ಜನರುಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ತಿಳಿಸಿದರು.
ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಕೆ.ಆರ್.ನರೇಂದ್ರಬಾಬು, ಉಪಾಧ್ಯಕ್ಷೆ ಸರಸ್ವತಮ್ಮ ಶಿವರಾಮರೆಡ್ಡಿ, ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ವಿ.ಮಂಜುನಾಥ್, ಕಾರ್ಯನಿರ್ವಹಣಾಧಿಕಾರಿ ಎಚ್.ಎನ್. ಮಂಜುನಾಥಸ್ವಾಮಿ, ಕ್ಷೇತ್ರಶಿಕ್ಷಣಾಧಿಕಾರಿ ಎಸ್.ಸಿದ್ದಪ್ಪ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸಿ.ಎನ್.ಸತ್ಯನಾರಾಯಣರೆಡ್ಡಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ತಾಲ್ಲೂಕು ವಿಸ್ತರಣಾಧಿಕಾರಿ ನಾಗರಾಜ್, ಅಲೆ ಮಾರಿ ಹಾಗೂ ಅರೆ ಅಲೆಮಾರಿ ಜಾಗೃತಿ ಸಮಿತಿಯ ನಾಮನಿರ್ದೇಶಿತ ನಿರ್ದೇಶಕ ಸೂರ್ಯನಾರಾಯಣ, ಮುಖಂಡ ಜಗನ್ನಾಥ್ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.