ಚಿಕ್ಕಬಳ್ಳಾಪುರ: ‘ಗ್ರಾಮೀಣ ಭಾಗದ ಯುವಜನರು ಕ್ರೀಡೆಗಳಲ್ಲಿ ಹೆಚ್ಚಿನ ಮಟ್ಟದಲ್ಲಿ ಭಾಗವಹಿಸಬೇಕು. ಆಟದಲ್ಲಿ ಸೋಲು, ಗೆಲುವು ಸಹಜ, ಸೋಲನ್ನು ಸವಾಲಾಗಿ ತೆಗೆದುಕೊಳ್ಳುವ ಮೂಲಕ ಗೆಲುವಿನ ಮೆಟ್ಟಿಲುಗಳಾಗಿ ರೂಪಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ನಿರ್ಮಲಾ ಮುನಿರಾಜು ತಿಳಿಸಿದರು.
ನಗರದ ಸರ್.ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಶುಕ್ರವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
‘ಕ್ರೀಡೆಯಿಂದ ಮಾನಸಿಕ ನೆಮ್ಮದಿ ಸಿಗುತ್ತದೆ, ನಿತ್ಯ ಜೀವನದಲ್ಲಿ ಉಲ್ಲಾಸದಿಂದ ಇರಲು ಸಾಧ್ಯ. ಆದ್ದರಿಂದ ವಿದ್ಯಾರ್ಥಿಗಳು ಕ್ರೀಡೆಗಳನ್ನು ನಿರಂತರ ಅಭ್ಯಾಸ ರೂಢಿಸಿಕೊಳ್ಳಬೇಕು. ಕ್ರೀಡೆಯಿಂದ ಸವಾಲುಗಳನ್ನು ಸಮರ್ಥವಾಗಿ ಎದುರಿಸುವ ಧೈರ್ಯ, ಆತ್ಮವಿಶ್ವಾಸ ವೃದ್ಧಿಸುತ್ತದೆ’ ಎಂದು ಹೇಳಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಟಿ.ಜಯಲಕ್ಷ್ಮೀ ಮಾತನಾಡಿ, ‘ಯುವಜನರು ಕ್ರೀಡೆಗೆ ಆದ್ಯತೆ ನೀಡುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕು. ಸರ್ಕಾರವು ಕ್ರೀಡೆಗೆ ಹೆಚ್ಚು ಮಹತ್ವ ನೀಡುತ್ತಿದ್ದು, ವಿದ್ಯಾರ್ಥಿಗಳು ಕ್ರೀಡಾಮನೋಭಾವನೆ ಬೆಳೆಸಿಕೊಳ್ಳುವ ಮೂಲಕ ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡುವಂತಹ ಕ್ರೀಡಾಪಟುಗಳಾಗಿ ಹೊರಹೊಮ್ಮಬೇಕು’ ಎಂದು ಹೇಳಿದರು.
ಕ್ರೀಡಾಕೂಟದಲ್ಲಿ ಪುರುಷರಿಗೆ ಹಾಗೂ ಮಹಿಳೆಯರಿಗೆ ಓಟ, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡು ಎಸೆತ, ಚಕ್ರ ಎಸೆತ, ಜಾವಲಿನ್ ಎಸೆತ, ರಿಲೇ, ವಾಲಿಬಾಲ್, ಖೋಖೋ, ಕಬಡ್ಡಿ, ಪುಟ್ಬಾಲ್, ಬ್ಯಾಸ್ಕೇಟ್ಬಾಲ್, ಥ್ರೋಬಾಲ್ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.
ಕ್ರೀಡಾಕೂಟದಲ್ಲಿ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಅಧ್ಯಕ್ಷ ನಾರಾಯಣಸ್ವಾಮಿ, ಜಿಲ್ಲಾ ದೈಹಿಕ ಶಿಕ್ಷಣ ಅಧೀಕ್ಷಕ ಶಿವರುದ್ರಪ್ಪ, ಹಾಕಿ ತರಬೇತುದಾರ ಮುಸ್ತಾಕ್ ಅಹಮ್ಮದ್, ದೈಹಿಕ ಶಿಕ್ಷಣ ಶಿಕ್ಷಕ ಮಾರುತಿ, ಕ್ರೀಡಾಪಟುಗಳಾದ ಮಂಚನಬಲೆ ಶ್ರೀನಿವಾಸ್, ನಾಗೇಂದ್ರ, ಸೀನಪ್ಪ ಹಾಜರಿದ್ದರು.