ಚಿಕ್ಕಬಳ್ಳಾಪುರ: 'ದಿನೇಶ್ ಗುಂಡೂರಾವ್ ಅವರು ಕೆಪಿಸಿಸಿ ಅಧ್ಯಕ್ಷರಾದ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಸತ್ತು ಹೋಯಿತು' ಎಂದು ಅನರ್ಹ ಶಾಸಕ ಡಾ.ಕೆ.ಸುಧಾಕರ್ ತಿಳಿಸಿದರು.
ತಾಲ್ಲೂಕಿನ ಮಂಡಿಕಲ್ ಗ್ರಾಮದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ದಿನೇಶ್ ಅವರು ಮೊದಲು ತಮ್ಮ ಯೋಗ್ಯತೆ ಅರಿಯಲಿ. ಅವರಿಂದಲೇ ರಾಜ್ಯದಲ್ಲಿ ಕಾಂಗ್ರೆಸ್ ಅಧೋಗತಿಗೆ ಇಳಿಯಿತು. ಯಡಿಯೂಪ್ಪ ಬಗ್ಗೆ ಮಾತನಾಡುವ ನೈತಿಕತೆ ಅವರಿಗೆ ಇಲ್ಲ' ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
'ಯಾವುದೇ ಸರ್ಕಾರವನ್ನು ಎರಡು ತಿಂಗಳಲ್ಲಿ ಮೌಲ್ಯಮಾಪನ ಮಾಡಲು ಸಾಧ್ಯವಿಲ್ಲ. ಐದು ವರ್ಷ ಅಧಿಕಾರ ನಡೆಸಿದ ಕಾಂಗ್ರೆಸ್ ನ ಶಾಸಕರ ಸಂಖ್ಯೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ 127 ರಿಂದ 78ಕ್ಕೆ ಬಂತು. ದಿನೇಶ್ ಅವರು ಅಧ್ಯಕ್ಷರಾದ ಮೇಲೆ ಲೋಕಸಭಾ ಚುನಾವಣೆಯಲ್ಲಿ ಒಂದು ಸ್ಥಾನಕ್ಕೆ ಕುಸಿಯಿತು' ಎಂದರು.
'ಯಡಿಯೂರಪ್ಪ ಅವರ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಉತ್ತಮವಾಗಿ ಕೆಲಸ ಮಾಡುತ್ತಿದೆ' ಎಂದರು.