ಚಿಕ್ಕಬಳ್ಳಾಪುರ: ‘ರಾಜ್ಯದಲ್ಲಿ ಬರದಿಂದ ರೈತರು ತತ್ತರಿಸಿದ್ದಾರೆ. ಒಂಬತ್ತು ತಿಂಗಳ ಕಾಂಗ್ರೆಸ್ ಆಡಳಿತದಲ್ಲಿ 500ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ನಮ್ಮ ಸರ್ಕಾರ ಬಂದ ಮೇಲೆ ರೈತರ ಆತ್ಮಹತ್ಯೆ ಕಡಿಮೆ ಆಗಿದೆ ಎಂದು ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರಿಂದ ಸುಳ್ಳು ಹೇಳಿಸಿದ್ದಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ದೂರಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರೈತರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲದ ಸರ್ಕಾರ ರಾಜ್ಯದಲ್ಲಿ ಇದೆ’ ಎಂದು ದೂರಿದರು.
‘ರಾಜ್ಯದ ಖಜಾನೆ ಬರಿದಾಗಿದೆ. ಆರ್ಥಿಕ ಸಂದಿಗ್ಧ ಸ್ಥಿತಿ ಮತ್ತು ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ಹೇಳಿಕೆ ನೀಡುತ್ತಾರೆ. ಹಾಗಾದರೆ ಇವರ ಜವಾಬ್ದಾರಿ ಏನು’ ಎಂದು ಪ್ರಶ್ನಿಸಿದರು.
ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮುಖ್ಯಮಂತ್ರಿ ಜವಾಬ್ದಾರಿ ಮರೆತಿದ್ದಾರೆ. ₹ 715 ಕೋಟಿ ಹಾಲಿನ ಪ್ರೋತ್ಸಾಹ ಧನವನ್ನು ಹೈನುಗಾರರಿಗೆ ಕೊಡಲು ಸಾಧ್ಯವಾಗುತ್ತಿಲ್ಲ’ ಎಂದು ಹೇಳಿದರು.
‘ಕಾಂಗ್ರೆಸ್ ಸರ್ಕಾರ ಬಂದು ಒಂಬತ್ತು ತಿಂಗಳಾಗಿದೆ. ಒಂದು ಹೊಸ ಕಾರ್ಯಕ್ರಮ ಸಹ ನೀಡಿಲ್ಲ. ಬಿ.ಎಸ್.ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಆಗಿದ್ದಾಗ ಬರವನ್ನು ಹೇಗೆ ಎದುರಿಸಿದರು, ಯಾವ ರೀತಿ ರೈತರಿಗೆ ಪರಿಹಾರ ನೀಡಿದರು ಎನ್ನುವುದು ಜನರಿಗೆ ಗೊತ್ತು’ ಎಂದು ಹೇಳಿದರು.
‘ಗ್ಯಾರಂಟಿ ಗ್ಯಾರಂಟಿ ಎಂದು ಕಡೆದು ಕಟ್ಟೆ ಹಾಕಿದ್ದು ಏನೂ ಇಲ್ಲ. ಬರದ ಈ ಸಮಯದಲ್ಲಿ ಎರಡು ಮೂರು ತಾಸು ವಿದ್ಯುತ್ ನೀಡಲು ಸಾಧ್ಯವಾಗುತ್ತಿಲ್ಲ. ಬಸ್ ಗಳು ಇಲ್ಲದೆ ಗ್ರಾಮಾಂತರ ಭಾಗದಲ್ಲಿ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ’ ಎಂದು ಹೇಳಿದರು.
‘ಈ ಎಲ್ಲ ವಿಚಾರಗಳಿಗೆ ಜನರು ಲೋಕಸಭಾ ಚುನಾವಣೆಯಲ್ಲಿ ಉತ್ತರ ನೀಡಲಿದ್ದಾರೆ’ ಎಂದರು.
‘ರಾಷ್ಟ್ರದ ಹಿತದೃಷ್ಟಿಯಿಂದ ಜೆಡಿಎಸ್ ಎನ್ ಡಿಎ ತೆಕ್ಕೆಗೆ ಬಂದಿದೆ. ಸುಖದ ಬಗ್ಗೆ ಆಲೋಚನೆ ಮಾಡುವವರು ಕಾಂಗ್ರೆಸ್ನವರು’ ಎಂದರು.