ಶಿಡ್ಲಘಟ್ಟ: ‘ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನಮನ್ನಣೆ ದೊರೆತಿದ್ದು, ಸುಭದ್ರ ಆಡಳಿತ ನೀಡುವ ನಿಟ್ಟಿನಲ್ಲಿ ಸರ್ಕಾರವು ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದೆ. ಇದು ದೇಶದಲ್ಲಿಯೇ ಮಾದರಿಯಾದ ಸರ್ಕಾರವಾಗಿದೆ’ ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದರು.
ಶಿಡ್ಲಘಟ್ಟದಲ್ಲಿ ಹೈಟೆಕ್ ರೇಷ್ಮೆಗೂಡು ಮಾರುಕಟ್ಟೆ ನಿರ್ಮಾಣಕ್ಕಾಗಿ ಜಾಗ ಗುರುತಿಸಲು ರೇಷ್ಮೆ ಸಚಿವ ಕೆ.ವೆಂಕಟೇಶ್ ಅವರೊಂದಿಗೆ ಬಂದಿದ್ದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರಿಗೆ ಶಿಡ್ಲಘಟ್ಟದ ಕಾಂಗ್ರೆಸ್ ಮುಖಂಡ ರಾಜೀವ್ಗೌಡ ಹಾಗೂ ಪಕ್ಷದ ಕಾರ್ಯಕರ್ತರು ಅದ್ದೂರಿ ಸ್ವಾಗತ ನೀಡಿ ಸನ್ಮಾನಿಸಿದರು.
ಸನ್ಮಾನ ಸ್ವೀಕರಿಸಿದ ಸಚಿವ ಡಾ.ಎಂ.ಸಿ.ಸುಧಾಕರ್ ಮಾತನಾಡಿ, ‘ಕಾಂಗ್ರೆಸ್ನ ಸಂಘಟನೆ, ಏಳಿಗೆಯನ್ನು ಎದುರಿಸಲಾಗದೆ ಜೆಡಿಎಸ್ ಹಾಗೂ ಬಿಜೆಪಿ ಒಂದಾಗುತ್ತಿವೆ. ಅದರಿಂದ ನಮಗೇನೂ ತೊಂದರೆಯಿಲ್ಲ’ ಎಂದರು.
‘ಮುಂದಿನ ದಿನಗಳಲ್ಲಿ ಎದುರಾಗುವ ಲೋಕಸಭೆ ಚುನಾವಣೆ ಸೇರಿ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಾವು ಒಗ್ಗಟ್ಟಾಗಿ ಎದುರಿಸಬೇಕಿದೆ. ಶಿಡ್ಲಘಟ್ಟದಲ್ಲಿ ಬಣ ರಾಜಕೀಯ ಬಿಟ್ಟು ಎಲ್ಲರೂ ಒಂದಾಗಿ ಪಕ್ಷದ ಬಲವರ್ಧನೆಗೆ ಮುಂದಾಗಬೇಕೆಂದು’ ಹೇಳಿದರು.
ಸಚಿವ ಕೆ.ವೆಂಕಟೇಶ್, ಡಾ.ಎಂ.ಸಿ.ಸುಧಾಕರ್ ಅವರನ್ನು ಕಾಂಗ್ರೆಸ್ ಮುಖಂಡ ರಾಜೀವ್ಗೌಡ ನೇತೃತ್ವದಲ್ಲಿ ಬೃಹತ್ ರೇಷ್ಮೆ ಹಾರ ಹಾಕಿ ಸನ್ಮಾನಿಸಲಾಯಿತು.
ಕೆಪಿಸಿಸಿ ಕೋ ಆರ್ಡಿನೇಟರ್ ರಾಜೀವ್ಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಸಹನಾ ರಾಜೀವ್ಗೌಡ, ಅಫ್ಸರ್ ಪಾಷ, ಯಾಸ್ಮೀನ್ ತಾಜ್, ಟಿ.ಕೆ.ನಟರಾಜ್, ಡಿ.ಪಿ.ನಾಗರಾಜ್ ಹಾಜರಿದ್ದರು.